ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯ ಗಂಭೀರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಕರ್ನಾಟಕದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಕಾಶ್ಮೀರಕ್ಕೆ ದಿಡೀ‌ರ್ ಆಗಿ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದರು.

ಸಚಿವ ಲಾಡ್ ಅವರು ಇಂದು ಸಂಜೆ ಹುಬ್ಬಳ್ಳಿಯಿಂದ ದೆಹಲಿಗೆ ವಿಶೇಷ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದಾರೆ. ದೆಹಲಿ ಬಳಿಕ ಅಲ್ಲಿಂದ ಅವರು ಕಾಶ್ಮೀರಕ್ಕೆ ತೆರಳಲಿದ್ದಾರೆ ಎನ್ನಲಾಗಿದೆ. ಕಾಶ್ಮೀರದ ಘಟನೆಯಲ್ಲಿ ಕರ್ನಾಟಕದ ಕೆಲವು ಕನ್ನಡಿಗರು ಸಿಕ್ಕಿರುವ ಮಾಹಿತಿ ಬಂದ ಹಿನ್ನೆಲೆಯಲ್ಲಿ, ಸ್ಥಳೀಯ ಆಡಳಿತದೊಂದಿಗೆ ಸಮನ್ವಯ ಸಾಧಿಸಿ, ಕನ್ನಡಿಗರ ಸುರಕ್ಷತೆ ಮತ್ತು ರಕ್ಷಣೆಗೆ ಕ್ರಮ ಕೈಗೊಳ್ಳಲು ಲಾಡ್ ಅವರಿಗೆ ಜವಾಬ್ದಾರಿ ವಹಿಸಲಾಗಿದೆ.

ಕಾಶ್ಮೀರದ ದಾಳಿಗೆ ಸಿಲುಕಿದ ಕನ್ನಡಿಗರು:
ದಕ್ಷಿಣ ಕಾಶ್ಮೀರದ ಪ್ರಮುಖ ಪ್ರವಾಸಿ ತಾಣವಾದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ಏಕಾಏಕಿ ನಡೆಸಿರುವ ದಾಳಿಯಲ್ಲಿ ಇಬ್ಬರು ವಿದೇಶಿಗರು ಸೇರಿದಂತೆ ಸುಮಾರು 26 ಪ್ರವಾಸಿಗರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ದಾಳಿಯಲ್ಲಿ ಶಿವಮೊಗ್ಗ ಹಾವೇರಿ ಮೂಲದ ಇಬ್ಬರು ಪ್ರವಾಸಿಗರು ಉಗ್ರರ ದಾಳಿಗೆ ಬಲಿಯಾಗಿದ್ದಾರೆ. ಈ ಘಟನೆಯಲ್ಲಿ ಕೆಲವು ಕನ್ನಡಿಗರು ಸಿಕ್ಕಿರುವ ಬಗ್ಗೆ ಆರಂಭಿಕ ಮಾಹಿತಿ ಲಭ್ಯವಾಗಿದ್ದು, ಈ ಕಾರಣಕ್ಕಾಗಿ ಕರ್ನಾಟಕ ಸರ್ಕಾರವು ತಕ್ಷಣ ಕ್ರಮ ಕೈಗೊಂಡಿದೆ.

ಸಚಿವ ಸಂತೋಷ್ ಲಾಡ್ ಅವರು ಕಾಶ್ಮೀರಕ್ಕೆ ತೆರಳಿ, ಸ್ಥಳೀಯ ಆಡಳಿತ, ಭದ್ರತಾ ಪಡೆಗಳು ಮತ್ತು ಕೇಂದ್ರ ಸರ್ಕಾರದೊಂದಿಗೆ ಸಂಪರ್ಕದಲ್ಲಿರುವರು. ಕನ್ನಡಿಗರಿಗೆ ಅಗತ್ಯವಿರುವ ವೈದ್ಯಕೀಯ ಸೌಲಭ್ಯ, ಸುರಕ್ಷಿತ ಸ್ಥಳಾಂತರ ಮತ್ತು ಇತರ ಸಹಾಯವನ್ನು ಒದಗಿಸುವ ಜವಾಬ್ದಾರಿಯನ್ನು ಅವರು ವಹಿಸಿಕೊಂಡಿದ್ದಾರೆ.

ಕರ್ನಾಟಕ ಸರ್ಕಾರದ ಕ್ರಮ
ಕರ್ನಾಟಕ ಸರ್ಕಾರವು ಕಾಶ್ಮೀರದಲ್ಲಿ ಸಿಕ್ಕಿರುವ ಕನ್ನಡಿಗರ ಕುಟುಂಬಗಳೊಂದಿಗೆ ಸಂಪರ್ಕದಲ್ಲಿದ್ದು, ಅವರಿಗೆ ಸೂಕ್ತ ಮಾಹಿತಿ ಮತ್ತು ಭರವಸೆ ನೀಡುತ್ತಿದೆ. ರಾಜ್ಯದಲ್ಲಿ 24/7 ಕಾರ್ಯನಿರ್ವಹಿಸುವ ಸಹಾಯವಾಣಿಯನ್ನು ಸ್ಥಾಪಿಸಲಾಗಿದ್ದು, ಕಾಶ್ಮೀರದ ಘಟನೆಯಿಂದ ಪ್ರಭಾವಿತರಾದ ಕುಟುಂಬಗಳು ಈ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಸರ್ಕಾರ ತಿಳಿಸಿದೆ.

ಸಿಎಂ ಸಿದ್ದರಾಮಯ್ಯ ಖಂಡನೆ:
ಈ ಘಟನೆಯನ್ನು ಖಂಡಿಸಿರುವ ಕರ್ನಾಟಕದ ಮುಖ್ಯಮಂತ್ರಿಗಳು, ‘ಕಾಶ್ಮೀರದ ದಾಳಿಯು ದುಃಖಕರವಾದ ಘಟನೆ. ಕನ್ನಡಿಗರ ಸುರಕ್ಷತೆಗಾಗಿ ನಾವು ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ. ಕೇಂದ್ರ ಸರ್ಕಾರದೊಂದಿಗೆ ಸಂಪೂರ್ಣ ಸಹಕಾರದೊಂದಿಗೆ ಕೆಲಸ ಮಾಡುತ್ತೇವೆ’ಎಂದು Xನಲ್ಲಿ ಪೋಸ್ಟ್ ಮಾಡಿದ್ದಾರೆ.

ಉಗ್ರಕೃತ್ಯದಿಂದಾಗಿ ದೂರದ ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ರಾಜ್ಯದ ಅಧಿಕಾರಿಗಳ ತಂಡವನ್ನು ಸಂಜೆಯೇ ರವಾನಿಸಲಾಗಿದೆ. ಈ ಸಂದರ್ಭದಲ್ಲಿ ನಮ್ಮ ಸರ್ಕಾರದಿಂದ ಹೆಚ್ಚಿನ ನೆರವಿನ ಅಗತ್ಯ ಇದೆ ಎನ್ನುವುದನ್ನು ಅರಿತು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರಿಗೆ ಕಾಶ್ಮೀರಕ್ಕೆ ತೆರಳಿ ಇಡೀ ಕಾರ್ಯಾಚರಣೆಯ ಮೇಲ್ವಿಚಾರಣೆ ವಹಿಸುವಂತೆ ಸೂಚನೆ ನೀಡಿದ್ದೇನೆ. ಸಂತ್ರಸ್ತ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ಕಾರ್ಯವನ್ನು ನಮ್ಮ ಸರ್ಕಾರ ಮಾಡಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!