





ಆಂಧ್ರ ಪ್ರದೇಶದಿಂದ ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡಲು ಉಪ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಮೂವರು ಸದಸ್ಯರನ್ನು ಆಯ್ಕೆ ಮಾಡಲು ಮೇ 9ರಂದು ಚುನಾವಣೆ ನಡೆಯಲಿದೆ. ಈ ಪೈಕಿ ಒಂದು ಸ್ಥಾನವನ್ನು ರಾಜ್ಯದ ಆಡಳಿತ ಪಕ್ಷವಾದ ಟಿಡಿಪಿ-ಜನಸೇನಾ ಮಿತ್ರಪಕ್ಷ ಬಿಜೆಪಿಗೆ ಬಿಟ್ಟುಕೊಟ್ಟಿತ್ತು.
ಬಿಜೆಪಿ ಕೆ. ಅಣ್ಣಾಮಲೈ ಅವರನ್ನು ಈ ಸ್ಥಾನಕ್ಕೆ ಆಯ್ಕೆ ಮಾಡಲಿದೆ ಎಂಬ ಸುದ್ದಿ ಹಬ್ಬಿತ್ತು.
ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈಗೆ ರಾಜ್ಯಸಭೆ ಉಪ ಚುನಾವಣೆ ಟಿಕೆಟ್ ಕೈತಪ್ಪಿದೆ. ಬಿಜೆಪಿ ಆರ್ಎಸ್ಎಸ್ ಮೂಲದ ಪಾಕ ವೆಂಕಟ ಸತ್ಯನಾರಾಯಣ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ರಾಜ್ಯಸಭೆ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಮಂಗಳವಾರವೇ ಕೊನೆಯ ದಿನವಾಗಿದೆ.
ಪಾಕ ವೆಂಕಟ ಸತ್ಯನಾರಾಯಣ ಆರ್ಎಸ್ಎಸ್ ಮೂಲದವರು. ಒಬಿಸಿ ಸಮಯದಾಯಕ್ಕೆ ಸೇರಿದವರು. ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಪಕ್ಷ ಮತ್ತು ಸಂಘಟನೆಯ ಜೊತೆಗೆ ಹಂತ ಹಂತವಾಗಿ ಬೆಳೆದು ಬಂದವರು. ಆದ್ದರಿಂದ ಅವರನ್ನು ರಾಜ್ಯಸಭಾ ಉಪ ಚುನಾವಣೆಗೆ ಅಭ್ಯರ್ಥಿ ಎಂದು ಬಿಜೆಪಿ ಘೋಷಣೆ ಮಾಡಿದೆ.

