ರಿಕ್ಷಾ ಚಾಲಕರೊಬ್ಬರ ಮೇಲೆ ಇಬ್ಬರು ದುಷ್ಕರ್ಮಿಗಳು ತಲವಾರಿನಿಂದ ದಾಳಿ ಮಾಡಿ ಕೊಲೆಗೆ ಯತ್ನಿಸಿರುವ ಘಟನೆ ಮೇ 1ರಂದು ರಾತ್ರಿ 11:15ರ ಸುಮಾರಿಗೆ ಶೇಡಿಗುಡ್ಡೆ ಬಳಿ ನಡೆದಿದೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ

ಹಿರಿಯಡ್ಕ ಬೊಮ್ಮರಬೆಟ್ಟುವಿನ ಸಂದೇಶ್ (31) ಮತ್ತು ಬಾಪೂಜಿ ದರ್ಖಾಸು ನಿವಾಸಿ ಸುಶಾಂತ್ (32) ಬಂದಿತ ಆರೋಪಿಗಳು.

ಆರೋಪಿಗಳಿಗೆ ಸೇರಿದ ಬೈಕ್

ಆತ್ರಾಡಿಯ ಅಬೂಬಕರ್ (50) ಎಂಬವರು ಬಾಡಿಗೆ ನಿಮಿತ್ತ ಆತ್ರಾಡಿಯಿಂದ ಮದಗ ಕಡೆಗೆ ಮುಖ್ಯರಸ್ತೆಯಲ್ಲಿ ರಿಕ್ಷಾದಲ್ಲಿ ಆತ್ರಾಡಿ ಗ್ಯಾಸ್ ಪೆಟ್ರೋಲ್ ಬಂಕ್ ಬಳಿ ಹೋಗುತ್ತಿದ್ದಾಗ ಬೈಕಿನಲ್ಲಿ ಬಂದ ಇಬ್ಬರು, ರಿಕ್ಷಾವನ್ನು ಹಿಂಬಾಲಿಸುತ್ತಿದ್ದರು. ಅಲ್ಲದೆ ಅವರು ಅಬೂಬಕರ್ ಅವರಲ್ಲಿ ರಿಕ್ಷಾವನ್ನು ನಿಲ್ಲಿಸುವಂತೆ ಬೆದರಿಸಿದರೆನ್ನಲಾಗಿದೆ. ಅಲ್ಲದೇ ರಿಕ್ಷಾವನ್ನು ಅಡ್ಡಗಟ್ಟಿ ನಿಲ್ಲಿಸಲು ಪ್ರಯತ್ನಿಸಿದ್ದು, ಅಬೂಬಕರ್ ರಿಕ್ಷಾವನ್ನು ನಿಲ್ಲಿಸದೇ ಚಲಾಯಿಸಿಕೊಂಡು ಮುಂದೆ ಹೋಗಿದ್ದಾರೆ.

ಈ ವೇಳೆ ಬೈಕಿನಲ್ಲಿದ್ದ ವ್ಯಕ್ತಿಗಳ ಪೈಕಿ ಹಿಂಬದಿ ಸವಾರನ ಕೈಯಲ್ಲಿ ತಲವಾರು ಇರುವುದನ್ನು ಗಮನಿಸಿದ ರಿಕ್ಷಾ ಚಾಲಕ, ಶೇಡಿಗುಡ್ಡೆ ಬಳಿ ರೋಸ್ ಬಸ್ಸಿನವರ ಮನೆ ಬಳಿ ಇರುವ ರಸ್ತೆಯಲ್ಲಿ ಆಟೋ ರಿಕ್ಷಾವನ್ನು ನಿಲ್ಲಿಸಿ ಓಡಲು ಯತ್ನಿಸಿದ್ದಾರೆ. ಈ ವೇಳೆ ದುಷ್ಕರ್ಮಿಗಳು ಅಬೂಬಕರ್ ಅವರ ತಲೆಯನ್ನು ಗುರಿಯಾಗಿಸಿ ತಲವಾರು ಬೀಸಿದ್ದಾರೆ. ಆದರೆ ಅವರು ತಲವಾರು ದಾಳಿಯಿಂದ ತಪ್ಪಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಮಧ್ಯೆ ದುಷ್ಕರ್ಮಿಗಳು ತಮ್ಮ ಕೈಯಲ್ಲಿದ್ದ ಬಾಟಲಿಯಿಂದ ಆಟೋ ರಿಕ್ಷಾದ ಮುಂಭಾಗದ ಗ್ಲಾಸಿಗೆ ಹೊಡೆದಿರುವುದಾಗಿ ದೂರಲಾಗಿದೆ. ಅಬೂಬಕರ್ ಕೂಡಲೇ ಅಲ್ಲೇ ಪಕ್ಕದಲ್ಲಿದ್ದ ಕಂಪೌಂಡ್ ಜಿಗಿದು ಓಡಿ ಹೋಗಿದ್ದಾರೆಂದು ತಿಳಿದು ಬಂದಿದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೂಡಲೇ ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಕೊಲೆ ಯತ್ನ ಪ್ರಕರಣ ದಾಖಲಿಸಿದ್ದಾರೆ.

ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತಿಯಾಗಿ ಕೃತ್ಯ: ಎಸ್ಪಿ ಮಾಹಿತಿ

ಆಟೊ ಚಾಲಕನ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಕೂಡಲೇ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಈ ಬಗ್ಗೆ ತನಿಖೆ ಮುಂದುವರಿದಿದೆ.

ಇವರು ಗುರುವಾರ ರಾತ್ರಿ ದ.ಕ. ಜಿಲ್ಲೆಯ ಬಜ್ಪೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಈ ಕೃತ್ಯ ಎಸಗಿರುವುದಾಗಿ ವಿಚಾರಣೆ ವೇಳೆ ಹೇಳಿಕೊಂಡಿದ್ದಾರೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!