
ಕಲಬುರಗಿ ಪ್ರವಾಸದಲ್ಲಿರುವ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ವಿರುದ್ಧ ಆಡಿದ ಅವಹೇಳನಕಾರಿ ಮಾತು ತೀವ್ರ ವಿರೋಧಕ್ಕೆ ಗುರಿಯಾಯಿತು. ಪಾಕಿಸ್ತಾನದ ಉಗ್ರರ ವಿರುದ್ಧ ಭಾರತೀಯ ಸೇನೆ ನಡೆಸಿದ್ದ ಆಪರೇಷನ್ ಸಿಂಧೂರ ಯಶ್ವಸಿಯಾದ ಬಗ್ಗೆ ಬಿಜೆಪಿ ಎಲ್ಲಾ ಕಡೆ ತಿರಂಗಾ ಯಾತ್ರೆ ಕಾರ್ಯಕ್ರಮ ಹಮ್ಮಿಕೊಂಡಿದೆ.
ಅದಕ್ಕಾಗಿ ನಾರಾಯಣಸ್ವಾಮಿ ಅವರು ಸಚಿವ ಪ್ರಿಯಾಂಕ್ ಖರ್ಗೆ ಪ್ರತಿನಿಧಿಸುವ ಚಿತ್ತಾಪುರ ಕ್ಷೇತ್ರದಲ್ಲಿ ಯಾತ್ರೆಯಲ್ಲಿ ಭಾಗವಹಿಸಲು ಬಂದಿದ್ದರು. ಅದಕ್ಕೂ ಮೊದಲು ಬೆಳಗ್ಗೆ ಕಲಬುರಗಿ ನಗರದಲ್ಲಿ ಸುದ್ದಿಗೋಷ್ಠಿ ಹಮ್ಮಿಕೊಂಡಿದ್ದರು. ಈ ವೇಳೆ, ಪ್ರಧಾನಿ ಮೋದಿಯನ್ನು ಪ್ರಶ್ನಿಸುವ ಸಚಿವ ಪ್ರಿಯಾಂಕ್ ಖರ್ಗೆ ಮೊದಲು ತಮ್ಮ ತಂದೆಯನ್ನು ಪ್ರಶ್ನಿಸಲಿ ಎಂದಿದ್ದಾರೆ. ಅಷ್ಟಕ್ಕೇ ಸುಮ್ಮನಾಗದೆ, ”ಆನೆ ನಡೆಯುವಾಗ ನಾಯಿ ಬೊಗುಳುತ್ತದೆ. ಹಾಗೆಯೇ ಪ್ರಧಾನಿ ದೇಶದ ಪರವಾಗಿ ಇರುವಾಗ ಪ್ರಿಯಾಂಕ್ ನಾಯಿ ತರ ಬೋಗಳುತ್ತಾರೆ” ಎಂದು ಬಿಟ್ಟಿದ್ದರು.
ಛಲವಾದಿ ಅವರ ಈ ಹೇಳಿಕೆ ಕಲಬುರಗಿ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಯಿತು. ರಾಜಕೀಯವಾಗಿ ನಮ್ಮನಾಯಕರನ್ನು ನೀವು ಏನೇ ಟೀಕೆ ಮಾಡಿದರೂ ಸಹಿಸಿಕೊಳ್ಳುತ್ತೇವೆ. ಆದರೆ, ವೈಯಕ್ತಿಕವಾಗಿ ನಾರಾಯಣಸ್ವಾಮಿ ಬೈದಿದ್ದಾರೆ. ಅದಕ್ಕಾಗಿ ಅವರು ಕ್ಷಮೆ ಕೇಳಲೇಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಪಟ್ಟು ಹಿಡಿದರು. ನಾರಾಯಣಸ್ವಾಮಿ ಚಿತ್ತಾಪುರದ ಪ್ರವಾಸಿ ಮಂದಿರಕ್ಕೆ ಆಗಮಿಸುತ್ತಿದ್ದಂತೆಯೇ ಗೇಟ್ ಮುಂದೆ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಛಲುವಾದಿ ನಾರಾಯಣಸ್ವಾಮಿ ಕ್ಷಮೆ ಕೇಳಲೆಬೇಕು, ಅಲ್ಲಿಯವರೆಗೂ ಪ್ರತಿಭಟನೆ ಕೈ ಬಿಡುವುದಿಲ್ಲ ಎಂದು ಪಟ್ಟುಹಿಡಿದಿದ್ದಾರೆ.
ಸಂಜೆ ನಾಲ್ಕು ಗಂಟೆಗೆ ಹೊತ್ತಿಗೆ ಚಿತ್ತಾಪುರ ಪ್ರವಾಸಿ ಮಂದಿರಕ್ಕೆ ಆಗಮಿಸುತ್ತಿದ್ದಂತೆಯೇ, ಕೈ ಕಾರ್ಯಕರ್ತರು ಘೆರಾವ್ ಹಾಕಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ವಿರುದ್ದ ನೀಡಿರುವ ಹೇಳಿಕೆಗೆ ಕ್ಷಮೆ ಕೇಳುವಂತೆ ಪಟ್ಟು ಹಿಡಿದಿದ್ದಾರೆ. ಸಂಜೆ ತಿರಂಗಾಯಾತ್ರೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಳಲು ಬಿಡದಂತೆ ಘೆರಾವ್ ಹಾಕಿದ್ದಾರೆ. ಸುಮಾರು ನಾಲ್ಕೈದು ಗಂಟೆಗಳ ಕಾಲ ಕಾಂಗ್ರೆಸ್ ಕಾರ್ಯಕರ್ತರು ಐಬಿ ಗೇಟ್ ಮುಂದೆಯೇ ಪ್ರತಿಭಟನೆ ಮಾಡಿದ ಕಾರಣ ಛಲವಾದಿ ನಾರಾಯಣಸ್ವಾಮಿ ಸ್ವಾಮಿ ಪ್ರವಾಸಿ ಮಂದಿರದ ಒಳಗಡೆಯೇ ಕಾಲ ಕಳೆಯುವಂತಾಯಿತು. ಅಷ್ಟರಲ್ಲಿ ಈ ವಿಷಯ ರಾಜ್ಯ ಬಿಜೆಪಿ ಹಿರಿಯ ನಾಯಕರ ಗಮನಕ್ಕೂ ಬಂದಿತ್ತು.
ನಾಲ್ಕೈದು ಗಂಟೆ ಪ್ರವಾಸಿ ಮಂದಿರದ ಒಳಗಡೆಯೇ ಲಾಕ್ ಆದ ಛಲವಾದಿ
ಕಾಂಗ್ರೆಸ್ ಕಾರ್ಯಕರ್ತರ ತೀವ್ರ ಪ್ರತಿಭಟನೆಯ ಕಾರಣ ಛಲವಾದಿ ನಾರಾಯಣಸ್ವಾಮಿ ಸುಮಾರು ನಾಲ್ಕೈದು ಗಂಟೆ ಪ್ರವಾಸಿ ಮಂದಿರದ ಒಳಗಡೆಯೇ ಉಳಿಯುವಂತಾಯಿತು. ಪ್ರವಾಸಿ ಮಂದಿರದ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು ಮಾತ್ರವಲ್ಲದೆ, ಛಲವಾದಿ ನಾರಾಯಣಸ್ವಾಮಿ ಕಾರಿನ ಮೇಲೆ ಬಣ್ಣ ಎರಚಿ, ಅವರ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.






