
ವಿಟ್ಲ: ಮೇ.8ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜುಗಾರಿ ಆಡುತ್ತಿರುವ ಬಗ್ಗೆ ಬಂದ ಮಾಹಿತಿ ಆಧಾರದಲ್ಲಿ ಜುಗಾರಿ ಅಡ್ಡೆಗೆ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಳ್ಳದೆ ಹಣದ ಬೇಡಿಕೆ ಒಡ್ಡಿದ ಆರೋಪದಲ್ಲಿ ವಿಟ್ಲ ಪೊಲೀಸ್ ಠಾಣಾ ಎಸ್.ಐ. ಕೌಶಿಕ್ ರವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ.
ಈ ವೇಳೆ ಘಟನಾ ಸ್ಥಳದಲ್ಲಿ ಜುಗಾರಿ ಆಟದಲ್ಲಿ ತೊಡಗಿದ್ದವರು ಪತ್ತೆಯಾಗಿದ್ದರು. ಮಾತ್ರವಲ್ಲದೆ ಸ್ಥಳದಲ್ಲಿ ಮೋಟಾರು ಸೈಕಲ್ ಕಂಡು ಬಂದಿತ್ತು. ಆರೋಪಿಗಳ ಸಹಿತ ಸೊತ್ತನ್ನು ವಶಕ್ಕೆ ಪಡೆದುಕೊಳ್ಳಬೇಕಿದ್ದ ಎಸ್.ಐ. ಕೌಶಿಕ್ ರವರು ಈ ಬಗ್ಗೆ ಕಾನೂನಾತ್ಮಕ ಕ್ರಮ ಜರುಗಿಸದೇ ಬೈಕ್ ಮಾಲಕನಿಗೆ ಕರೆಮಾಡಿ ಠಾಣೆಗೆ ಬರಮಾಡಿಕೊಂಡಿದ್ದರು. ಬಳಿಕ ಬೈಕ್ ಮಾಲಿಕನಿಗೆ ಮೂರನೇ ವ್ಯಕ್ತಿಯ ಮೂಲಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣದ ಬೇಡಿಕೆಯಿಟ್ಟಿರುವ ಸಂಭಾಷಣೆಯು ಸಾಮಾಜಿಕ ಜಾಲತಾಣದ ಮೂಲಕ ಪ್ರಸಾರವಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಎಸ್.ಐ. ಮೇಲೆ ಇಲಾಖಾ ಶಿಸ್ತು ಕ್ರಮ ಬಾಕಿಯಿರುವಂತೆ ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ ಎಂದು ಮಾಹಿತಿ ತಿಳಿದುಬಂದಿದೆ.






