
ಬಸ್ ನಿಲ್ದಾಣದಲ್ಲಿ ನಿಂತಿದ್ದವರ ಮೇಲೆ ಖಾಸಗಿ ಬಸ್ಸೊಂದು ಎರಗಿದ ಭೀಕರ ಘಟನೆಯ ವಿಡಿಯೋ ವೈರಲ್ ಆಗಿದೆ.ಕೇರಳದ ತ್ರಿಶೂರ್ನಲ್ಲಿ ಶನಿವಾರ (ಜೂ.21) ಮಧ್ಯಾಹ್ನ ನಡೆದಿದ್ದು, ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಹಿಳೆಯರು ಮಳೆಯಲ್ಲಿ ಬಸ್ ನಿಲ್ದಾಣದಲ್ಲಿ ಕೊಡೆ ಹಿಡಿದು ಕಾಯುತ್ತಿದ್ದರು.
ಈ ವೇಳೆ ವೇಗವಾಗಿ ಬಂದ ಖಾಸಗಿ ಬಸ್, ನಿಂತಿದ್ದವರ ಮೇಲೆ ಎರಗಿದೆ. ಪರಿಣಾಮ ಕನಿಷ್ಠ ಮೂವರು ಮಹಿಳೆಯರು ಗಾಯಗೊಂಡಿದ್ದು, ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಘಟನೆ ನಡೆದ ಇನ್ನೊಂದು ಬದಿಯಲ್ಲಿ ಟ್ರಾಫಿಕ್ ಪೊಲೀಸ್ ಕೂಡ ಇದ್ದರು. ಬಸ್ಸಿನ ಚಾಲಕ ಘಟನೆ ಬಳಿಕ ಕೂಡಲೇ ಸೀಟಿನಿಂದ ಹಾರಿ ಅಲ್ಲಿಂದ ಪರಾರಿಯಾಗಿದ್ದಾನೆ. ಆತನನ್ನು ಹಿಡಿಯಲು ಜನ ಓಡುವುದು ವಿಡಿಯೋದಲ್ಲಿ ಸೆರೆಯಾಗಿದೆ.ಗಾಯಗೊಂಡ ಮೂವರನ್ನು ಕೂರ್ಕೆಂಚೇರಿಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಪ್ರೇಮಾ ಎಂಬ ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಸದ್ಯ ಪೊಲೀಸರು ಈ ಬಗ್ಗೆ ದೂರು ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.






