ದ.ಕ. ಜಿಲ್ಲೆಯಲ್ಲಿ ಸ್ಥಗಿತಗೊಂಡಿರುವ ಕೆಂಪುಕಲ್ಲು ತೆಗೆಯುವುದು ಮತ್ತು ಮರಳುಗಾರಿಕೆಗೆ ಸಂಬಂಧಿಸಿ ಕಾನೂನು ರೀತಿಯಲ್ಲಿ ಕ್ರಮಕ್ಕೆ ಮುಂದಿನ ವಾರ ಬೆಂಗಳೂರಿನಲ್ಲಿ ಉನ್ನತ ಮಟ್ಟದ ಸಭೆ ನಡೆಸಿ ಅಗತ್ಯ ಕ್ರಮ ವಹಿಸಲಾಗುವುದು. ಸದ್ಯ ತಾತ್ಕಾಲಿಕವಾಗಿ ವ್ಯವಸ್ಥೆ ಸಾಧ್ಯವಿಲ್ಲ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

ದ.ಕ. ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ದ.ಕ. ಜಿಲ್ಲಾ ಮಟ್ಟದ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂದರ್ಭ ಸಭೆಯಲ್ಲಿ ಭಾಗವಹಿಸಿದ್ದ ಶಾಸಕರು ಜಿಲ್ಲೆಯಲ್ಲಿ ಮನೆ ನಿರ್ಮಾಣ ಸೇರಿದಂತೆ ಬಡ ಕೂಲಿ ಕಾರ್ಮಿಕರಿಗೆ ಸಮಸ್ಯೆಯಾಗಿರುವ ಕಾರಣ ಸಕ್ರಮ ಮರಳು ಹಾಗೂ ಕೆಂಪು ಕಲ್ಲು ತೆಗೆಯಲು ಅವಕಾಶ ನೀಡಲು ಒತ್ತಾಯಿಸಿದಾಗ ಈ ಪ್ರತಿಕ್ರಿಯೆ ನೀಡಿದರು.

ಬೆಂಗಳೂರಿನಲ್ಲಿ ಸಭೆಗೆ ಮುನ್ನ ದ.ಕ. ಜಿಲ್ಲಾಧಿಕಾರಿಯವರು ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳಿನ ಅಭಾವದ ಬಗ್ಗೆ ಸಭೆ ನಡೆಸುವಂತೆ ಸಲಹೆ ನೀಡಿದ ಅವರು, ಮರಳು ಮತ್ತು ಕೆಂಪು ಕಲ್ಲು ತೆಗೆಯಲು ಮರು ಟೆಂಡರ್ ಮಾಡುವ ಬ್ಲಾಕ್‌ಗಳ ಪರವಾನಿಗೆಯ ಪಟ್ಟಿಯನ್ನು ಒಳಗೊಂಡು ವರದಿ ಸಲ್ಲಿಸಬೇಕು. ಜಿಲ್ಲಾಡಳಿತದ ವರದಿ ಆಧಾರದ ಮೇಲೆ ಬೆಂಗಳೂರಿನಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಆಯುಕ್ತರೊಂದಿಗೆ ಉನ್ನತ ಮಟ್ಟದ ಸಭೆಯಲ್ಲಿ ಮರಳು ಮತ್ತು ಕೆಂಪು ಕಲ್ಲು ತೆಗೆಯುವ ಕಾನೂನು ಪ್ರಕ್ರಿಯೆಗಳ ಬಗ್ಗೆ ಚರ್ಚಿಸಿ ನಿಯಮಗಳೊಂದಿಗೆ ಕ್ರಮ ವಹಿಸಲಾಗುವುದು. ಮಾತ್ರವಲ್ಲದೆ ರಾಜ್ಯದಲ್ಲಿ ಅಧಿಕ ಪ್ರಮಾಣದಲ್ಲಿ ರಾಜಧನವನ್ನು ವಿಧಿಸಲಾಗಿದೆ ಎಂಬ ಆರೋಪದ ಕುರಿತಂತೆಯೂ ಚರ್ಚಿಸಲಾಗು ವುದು. ಜಿಲ್ಲೆಯಲ್ಲಿ ಅಕ್ರಮ ಕೆಂಪುಕಲ್ಲಿನ ಗಣಿಗಾರಿಕೆಗೆ ಸಂಬಂಧಿಸಿ ಲೋಕಾಯುಕ್ತರು ಈಗಾಗಲೇ 18 ಅಧಿಕಾರಿಗಳ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಹಾಗಾಗಿ ಸದ್ಯ ಜಿಲ್ಲೆಯಲ್ಲಿ ಈ ಬಗ್ಗೆ ತಾತ್ಕಾಲಿಕ ಕ್ರಮಗಳನ್ನು ಅನುಸರಿಸಲು ಸಾಧ್ಯವಿಲ್ಲ. ಕಾನೂನು ಚೌಕಟ್ಟಿನಲ್ಲಿಯೇ ಈ ಬಗ್ಗೆ ನಿರ್ಧಾರ ಆಗಬೇಕಾಗಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಸಭೆಯಲ್ಲಿ ಕೆಂಪು ಕಲ್ಲು ಹಾಗೂ ಮರಳಿನ ಅಭಾದಿಂದ ತೊಂದರೆ ಆಗಿರುವ ಕುರಿತಂತೆ ಸಭೆಯಲ್ಲಿ ಆರಂಭದಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ಉಮಾನಾಥ ಕೋಟ್ಯಾನ್, ಮರಳು ಹಾಗೂ ಕೆಂಪುಕಲ್ಲಿನ ಅಕ್ರಮ ಗಣಿಗಾರಿಕೆಯನ್ನು ನೂತನ ಆಯುಕ್ತರು ಹಾಗೂ ಎಸ್ಪಿಯವರು ಬಂದ ಬಳಿಕ ಸಂಪೂರ್ಣವಾಗಿ ನಿಲ್ಲಿಸಲಾಗಿದೆ. ಇದು ಉತ್ತಮ ವಿಚಾರ. ಆದರೆ ಅದನ್ನು ಸಕ್ರಮಗೊಳಿಸಬೇಕಾಗಿದೆ. ಮರಳು ಮತ್ತು ಕೆಂಪು ಕಲ್ಲು ಇಲ್ಲದೆ ಮೇಸ್ತ್ರಿಯಿಂದ ಹಿಡಿದು ಅನೇಕ ಕಾರ್ಮಿಕರಿಗೆ ಕೆಲಸ ಇಲ್ಲದೆ ಊಟಕ್ಕೆ ಗತಿ ಇಲ್ಲವಾ ಗಿದೆ. ಜಿಲ್ಲಾಧಿಕಾರಿ ಮಧ್ಯ ಪ್ರವೇಶಿಸಿ ತಕ್ಷಣ ಮರಳು ಮತ್ತು ಕೆಂಪು ಕಲ್ಲು ದೊರೆಯುವುದನ್ನು ಸಕ್ರಮ ಗೊಳಿಸಬೇಕು ಎಂದು ಆಗ್ರಹಿಸಿದಾಗ, ಶಾಸಕರಾದ ಹರೀಶ್ ಪೂಂಜಾ, ರಾಜೇಶ್ ನಾಯ್ಕ್ ಅವರೂ ದನಿಗೂಡಿಸಿದರು.

ರಾಜ್ಯದಲ್ಲಿ ಕೆಂಪು ಕಲ್ಲು ಗಣಿಗಾರಿಕೆಗೆ ಟನ್‌ಗೆ 282 ರೂ. ರಾಜಧನ ವಿಧಿಸಲಾಗುತ್ತಿದೆ, ಕೇರಳದಲ್ಲಿ 32 ರೂ.ಗಳು ಎಂದು ಉಮಾನಾಥ ಕೋಟ್ಯಾನ್ ಹೇಳಿದರು.

ಈ ಸಂದರ್ಭ ಶಾಸಕರಾದ ಐವನ್ ಡಿಸೋಜಾ ಮಾತನಾಡಿ, ಕೆಂಪು ಕಲ್ಲು ತೆಗೆಯಲು ಪರವಾನಿಗೆ ಕೋರಿದಾಗ ಅಧಿಕಾರಿಗಳು ಕೃಷಿ ಭೂಮಿಯಲ್ಲಿ ಕೆಂಪು ಕಲ್ಲು ತೆಗೆದು ಸಮತಟ್ಟು ಮಾಡಿ ಕೃಷಿ ಮಾಡುವ ಉದ್ದೇಶಕ್ಕಾಗಿ ಅನುಮತಿ ಎಂದು 5000 ರೂ. ಶುಲ್ಕ ಪಡೆದು ಪರವಾನಿಗೆಗೆ ಅವಕಾಶ ನೀಡುತ್ತಾರೆ. ಇದು ಕಾನೂನು ಪ್ರಕಾರದ ಅನುಮತಿ ಆಗಿರುವುದಿಲ್ಲ. ಇದು ಕೃಷಿಗಾಗಿ ನೀಡಿರುವ ಅನುಮತಿ ಆಗಿದ್ದು, ಕೆಂಪು ಕಲ್ಲು ಗಣಿಗಾರಿಕೆಗೆ ಅವಕಾಶವಿಲ್ಲ, ಇದು ಅಕ್ರಮ ಎಂದು ಬಂದ್ ಮಾಡಲಾಗುತ್ತದೆ. ಜಿಲ್ಲೆಯಲ್ಲಿ ಕೆಂಪು ಕಲ್ಲು ಇಲ್ಲದೆ ಮನೆ ಕಟ್ಟಲು ಆಗುವುದಿಲ್ಲ. ಎಂ ಸ್ಯಾಂಡ್ ಕೂಡಾ ನಮ್ಮಲ್ಲಿ ಹೆಚ್ಚಾಗಿ ಬಳಕೆಯಾಗು ವುದಿಲ್ಲ. ಮರಳು ಮತ್ತು ಕೆಂಪುಕಲ್ಲು ಜನರಿಗೆ ಸಿಗುವ ರೀತಿಯಲ್ಲಿ ಕಾನೂನಾತ್ಮಕಗೊಳಿಸಬೇಕು ಎಂದು ಆಗ್ರಹಿಸಿದರು.

ಶಾಸಕ ಹರೀಶ್ ಪೂಂಜಾ ಮಾತನಾಡಿ, ಮರಳು ಮತ್ತು ಕಲ್ಲಿನ ಸಮಸ್ಯೆಯಿಂದ ತುಂಬಾ ಜನರಿಗೆ ಕೆಲಸ ಇಲ್ಲವಾಗಿದೆ. ಗ್ರಾಮ ಪಂಚಯಾತ್‌ನ ರಸ್ತೆಗಳಿಗೆ ಕಚ್ಚಾ ರಸ್ತೆಗಳಿಗೆ ಚರಳನ್ನು ಹಾಕಲಾಗುತ್ತದೆ. ಇದು ಕೂಡಾ ಇಲ್ಲದೆ ಗ್ರಾಮೀಣ ಭಾಗದ ಜನರು ತೊಂದರೆ ಅನುಭವಿಸುತ್ತಿದ್ದಾರೆ ಎಂದಾಗ, ಶಾಸಕ ರಾಜೇಶ್ ನಾಯ್ಕ್ ಅವರೂ ಕಾನೂನು ರೀತಿಯಲ್ಲಿ ಮರಳು ಹಾಗೂ ಕೆಂಪುಕಲ್ಲು ಲಭ್ಯವಾಗುವಂತೆ ತಕ್ಷಣ ಕ್ರಮ ವಹಿಸಬೇಕೆಂದು ಒತ್ತಾಯಿಸಿದರು.

ವ್ಯಾವಹಾರಿಕ ದೃಷ್ಟಿಯಿಂದ ಕೆಂಪು ಕಲ್ಲು ತೆಗೆಯುವುದು ಗಣಿಗಾರಿಕೆ ಎಂದೇ ಪರಿಗಣಿಸಲಾಗುತ್ತದೆ. ಸದ್ಯ ಲೋಕಾಯುಕ್ತ ವರದಿ ಆಧಾರದಲ್ಲಿ ನಾವು ಕ್ರಮ ವಹಿಸಬೇಕಾಗಿದೆ ಎಂದು ಸಚಿವ ದಿನೇಶ್ ಗೂಂಡೂರಾವ್ ಸ್ಪಷ್ಟಪಡಿಸಿದಾಗ, ತನಿಖೆ ಆಗಿ ಬರುವವರೆಗೆ ಕಷ್ಟಕರವಾದ ಪರಿಸ್ಥಿತಿಗೆ ತಾತ್ಕಾಲಿಕವಾಗಿ ನಿಭಾಯಿಸಬೇಕು ಎಂದು ಎಂದು ಉಮಾನಾಥ ಕೋಟ್ಯಾನ್ ಹೇಳಿದರೆ, ಅಭಿವೃದ್ಧಿ ಕಾಮಗಾರಿಗಳಿಗೆ ತಡೆಯಾಗಬಾರದು ಎಂದು ಶಾಸಕ ಪ್ರತಾಪ್ ಸಿಂಹ ನಾಯಕ್ ಆಗ್ರಹಿಸಿದರು.

ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕ ಸಂದೀಪ್ ಜಿ.ಯು. ಮಾಹಿತಿ ನೀಡಿ, ಜಿಲ್ಲೆಯಲ್ಲಿ 26000 ಮೆಟ್ರಿಕ್ ಟನ್ ಕೆಂಪು ಕಲ್ಲು ಲಭ್ಯವಿದೆ.

25 ಮರಳು ಬ್ಲಾಕ್‌ಗಳಲ್ಲಿ 15 ಕಾರ್ಯನಿರ್ವಹಿಸುತ್ತಿದ್ದು, ಜೂನ್ 5ರಿಂದ ಅಕ್ಟೋಬರ್ 15ರವರೆಗೆ ಪರಿಸರ ಕ್ಲಿಯರೆನ್ಸ್ ಗಣಿಗಾರಿಕೆಗೆ ನಿಷೇಧವಿರುತ್ತದೆ. 25 ಬ್ಲಾಕ್‌ಗಳಲ್ಲಿ 5.55 ಲಕ್ಷ ಟನ್ ಮರಳು ಲಭ್ಯವಿದೆ. ಕಾರ್ಯನಿರ್ವವಹಿಸುತ್ತಿರುವ 15 ಬ್ಲಾಕ್‌ಗಳಲ್ಲಿ 3.44 ಲಕ್ಷ ಟನ್ ಮರಳು ಲಭ್ಯವಿದೆ.

ಕಳೆದ ವರ್ಷ ಜಿಲ್ಲೆಯಲ್ಲಿ 1.16 ಲಕ್ಷ ಟನ್ ಎಂ ಸ್ಯಾಂಡ್ ಮಾರಾಟ ಆಗಿದೆ. 2 ತಿಂಗಳಲ್ಲಿ 27 ಸಾವಿರ ಮೆಟ್ರಿಕ್ ಟನ್ ಮಾರಾಟ ಆಗಿದೆ. 74650 ಮೆಟ್ರಿಕ್ ಟನ್ ಮರಳು ಕಳೆದ ವರ್ಷ ಮಾರಾಟ ಆಗಿದೆ. ಈ ವರ್ಷ 11000 ಮೆಟ್ರಿಕ್ ಟನ್ ಮಾರಾಟ ಆಗಿದೆ. ಮೂರು ಟನ್ ಲಾರಿಗೆ 10 ಸಾವಿರ ರೂ.ನಿಂದ 12000 ರೂ.ಗೆ ಮರಳು ಪೂರೈಸಲಾಗುತ್ತದೆ ಎಂದು ವಿವರಿಸಿದರು.

ಈ ಸಂದರ್ಭ ಪ್ರತಿಕ್ರಿಯಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್, ಉಡುಪಿಯಲ್ಲಿ ಸ್ಯಾಂಡ್ ಬಜಾರ್ ಆಯಪ್ ಮೂಲಕ ನಿರಂತರವಾಗಿ ಮರಳು ದೊರೆಯುತ್ತಿದೆ. ಇಲ್ಲಿಯೂ ಅದೇ ರೀತಿ ಆಯಪ್ ಮೂಲಕ ಬೇಡಿಕೆ ಸಲ್ಲಿಸಲು ಅವಕಾಶ ನೀಡಿದರೆ, ಮರಳು ಬೇಕಾದವರಿಗೆ ಪೂರೈಕೆ ಮಾಡ ಬಹುದು. ಹೆಚ್ಚಿನ ಹಣ ಪಡೆದಾಗ ದೂರು ನೀಡಿದರೆ ಕ್ರಮ ವಹಿಸಬಹುದು ಎಂದು ಹೇಳಿದರು.

ಸಭೆಯಲ್ಲಿ ಶಾಸಕರಾದ ಬೋಜೇಗೌಡ, ಮಂಜುನಾಥ ಭಂಡಾರಿ, ಡಾ. ಧನಂಜಯ ಸರ್ಜಿ, ಕಿಶೋರ್ ಕುಮಾರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಭರತ್ ಮುಂಡೋಡಿ, ಕೆಡಿಪಿ ನಾಮ ನಿರ್ದೇಶಿತ ಸದಸ್ಯರಾದ ಸಂತೋಷ್ ಕುಮಾರ್, ಸುಜಯ್ ಕೃಷ್ಮ, ಮೆಲ್ವಿನ್ ಡಿಸೋಜಾ, ಪ್ರವೀಣ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ, ಜಿ.ಪಂ. ಸಿಇಒ ಡಾ. ಆನಂದ್, ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಆಯಂಟನಿ ಮರಿಯಪ್ಪ ಮೊದಲಾದವರು ಉಪಸ್ಥಿತರಿದ್ದರು.

“ದ.ಕ. ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ಅಥವಾ ಕೆಂಪು ಕಲ್ಲಿನ ಗಣಿಗಾರಿಕೆಗೆ ಸಂಬಂಧಿಸಿ ಪೊಲೀಸ್ ಆಯುಕ್ತರು, ಪೊಲೀಸ್ ವರಿಷ್ಠಾಧಿಕಾರಿ ಹಾಗೂ ನಾನು ಸೇರಿದಂತೆ ಎಲ್ಲರದ್ದೂ ಒಂದೇ ನಿಲುವು. ಯಾವುದೇ ಕಾರಣಕ್ಕೂ ಜಿಲ್ಲೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ”.

-ದರ್ಶನ್ ಎಚ್.ವಿ., ಜಿಲ್ಲಾಧಿಕಾರಿ, ದ.ಕ.

“ಕೆಂಪು ಕಲ್ಲು ಹಾಗೂ ಮರಳಿನ ಅಕ್ರಮ ಗಣಿಗಾರಿಕೆಯ ಅವ್ಯವಹಾರಗಳು ಜಿಲ್ಲೆಯಲ್ಲಿ ನಡೆಯುವ ಕೋಮುಗಲಭೆ, ಹಲ್ಲೆ ಪ್ರಕರಣಗಳಲ್ಲಿ ಸಂಬಂಧ ಇರುವುದು ಹಲವು ಸಂದರ್ಭಗಳಲ್ಲಿ ಕಂಡು ಬಂದಿರುತ್ತದೆ. ಹಾಗಾಗಿ ಈ ಅಕ್ರಮಗಳಿಗೆ ಕಟ್ಟುನಿಟ್ಟಿನ ಕ್ರಮ ವಹಿಸಿರುವುದರಿಂದ ಜಿಲ್ಲೆಯಲ್ಲಿ ಸದ್ಯವೂ ಎಲ್ಲವೂ ಬಂದ್ ಆಗಿ ನಿಯಂತ್ರಣದಲ್ಲಿದೆ. ಹಾಗಾಗಿ ಜಿಲ್ಲೆಗೆ ಅಗತ್ಯವಾಗಿರುವ ಮರಳು ಅಥವಾ ಕೆಂಪುಕಲ್ಲಿನ ಸಮಸ್ಯೆಯನ್ನು ನ್ಯಾಯಯುತವಾದ ಮಾರ್ಗದಲ್ಲಿ ಪರಿಹರಿಸಲಾಗುವುದು. ಈ ನಡುವೆ ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆಯನ್ನು ಕಾಪಾಡಾಡುವ ನಿಟ್ಟಿನಲ್ಲಿ ಶೀಘ್ರವೇ ಶಾಂತಿ ಸಭೆಯನ್ನೂ ನಡೆಸಲಾಗುವುದು”.

-ದಿನೇಶ್ ಗುಂಡೂರಾವ್, ಜಿಲ್ಲಾ ಉಸ್ತುವಾರಿ ಸಚಿವರು, ದ.ಕ.

Leave a Reply

Your email address will not be published. Required fields are marked *

Join WhatsApp Group
error: Content is protected !!