ಉಡುಪಿ :ಜಿಲ್ಲೆಯ ಪಡುಬಿದ್ರಿ, ಕೋಟ ಮತ್ತು ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳವು ಪ್ರಕರಣಗಳಿಗೆ ಸಂಬಂಧಿಸಿ ಅಂತರಾಜ್ಯ ಕಳವು ಆರೋಪಿಗಳನ್ನು ಬಂಧಿಸುವಲ್ಲಿ ಪಡುಬಿದ್ರಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಾಸರಗೋಡು ಜಿಲ್ಲೆಯ ಕುಂಬಳೆ ಮೊಗ್ರಾಲ್ ಮೂಲದ ಪುತ್ತೂರು ತಾಲೂಕಿನ ಕೊಯ್ಲ ಗ್ರಾಮದ ಕಲಾಯಿ ನಿವಾಸಿ ಇಬ್ರಾಹಿಂ ಕಲಂದರ್ ಹಾಗೂ ಕಾಸರಗೋಡು ಜಿಲ್ಲೆಯ ಕುಂಬಳೆ ಉರ್ಮಿಚಾಲ್ ಬೇಕೂರು ನಿವಾಸಿ ರಿಯಾಝ್ ಯಾನೆ ಕಡಪ್ಪ ರಿಯಾಝ್ ಬಂಧಿತ ಆರೋಪಿಗಳು.

ಜೂ.22ರಂದು ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಪಾದೆಬೆಟ್ಟು ಗ್ರಾಮದ ಕಾಮತ್ ಪೆಟ್ರೋಲ್ ಪಂಪ್ ಬಳಿ ಗಣೇಶ್‌ಪ್ರಸಾದ್ ಶೆಟ್ಟಿ ಎಂಬರವರ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನದ ಸರವನ್ನು ಕಳವು ಮಾಡಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು, ಈ ಕುರಿತು ಸಂಪೂರ್ಣ ಮಾಹಿತಿ ಸಂಗ್ರಹಿಸಿ, ಆರೋಪಿಯನ್ನು ಬಂಧಿಸಿ, ಕಳ್ಳತನಕ್ಕೆ ಉಪಯೋಗಿಸಿದ ಕಾರನ್ನು ಮತ್ತು 24,000ರೂ. ನಗದನ್ನು ವಶಪಡಿಸಿಕೊಂಡಿ‌ ದ್ದಾರೆ. ಆರೋಪಿಗಳನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸ ಲಾಗಿದೆ.

ಇಬ್ರಾಹಿಂ ಕಲಂದರ್ ವಿರುದ್ಧ ಈಗಾಗಲೇ ಕಾಸರಗೋಡು ಜಿಲ್ಲೆಯ ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ಎರಡು ದೇವಸ್ಥಾನ ಕಳವು, ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಒಂದು ಮನೆ ಕಳವು, ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಒಂದು ದರೋಡೆಗೆ ಪ್ರಯತ್ನ, ಮೇಲ್ಪರಂಭ ಠಾಣೆಯಲ್ಲಿ ಮನೆ ಕಳವು ಹಾಗೂ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಮುನಿಯಲು ಸೊಸೈಟಿ ದರೋಡೆ, ವಿಟ್ಲ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಬ್ಯಾಂಕ್ ದರೋಡೆ ಪ್ರಕರಣ, ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಅಡಿಕೆ ಕಳವು ಪ್ರಕರಣ, ಪುತ್ತೂರು ನಗರ ಮತ್ತು ಗ್ರಾಮಾಂತರ ಠಾಣೆಯಲ್ಲಿ 4 ಮನೆ ಕಳವು ಪ್ರಕರಣ, ಕಡಬ ಪೊಲೀಸ್ ಠಾಣೆಯಲ್ಲಿ ಸರ ಕಳ್ಳತನ, ಉಪ್ಪಿನಂಗಡಿ ಠಾಣೆಯಲ್ಲಿ ಅಂಗಡಿ ಕಳವು, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅಂಗಡಿ ಕಳವು, ಮಡಿಕೇರಿ ಜಿಲ್ಲೆಯ ಕುಶಾಲನಗರ ಠಾಣೆಯಲ್ಲಿ ಕಳವು ಪ್ರಕರಣಗಳು ದಾಖಲಾಗಿವೆ. ಈತ ಫೆ.15ರಂದು ಕೇರಳ ರಾಜ್ಯದ ಹೊಸದುರ್ಗ ಜಿಲ್ಲಾ ಕಾರಾಗೃಹದಿಂದ ಬಿಡುಗಡೆ ಹೊಂದಿದ್ದನು.

ರಿಯಾಝ್ ವಿರುದ್ಧ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಕುಂಬಳೆ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ಹಾಗೂ ಪುತ್ತೂರು ನಗರ ಠಾಣೆಯಲ್ಲಿ ಗಾಂಜಾ ಮಾರಾಟ ಪ್ರಕರಣ ದಾಖಲಾಗಿದ್ದು, ಈತ ಕೂಡ ಮೇ 12ರಂದು ಕಾಸರಗೋಡು ಸಬ್‌ಜೈಲಿನಿಂದ ಬಿಡುಗಡೆ ಹೊಂದಿದ್ದನು.

ಉಡುಪಿ ಎಸ್ಪಿ ಹರಿರಾಮ್ ಶಂಕರ ಆದೇಶದಂತೆ ಜಿಲ್ಲಾ ಹೆಚ್ಚುವರಿ ಎಸ್ಪಿಗಳಾದ ಸದಾನಂದ ನಾಯಕ್ ಮತ್ತು ಪರಮೇಶ್ವರ ಹೆಗಡೆ ಮಾರ್ಗದರ್ಶನ ದಂತೆ ಕಾರ್ಕಳ ಎಎಸ್ಪಿ ಹರ್ಷ ಪ್ರಿಯಾಂವಧ ನೇತೃತ್ವದಲ್ಲಿ ಕಾಪು ವೃತ್ತ ನಿರೀಕ್ಷಕಿ ಜಯಶ್ರೀ ಮಾನೆ, ಪಡುಬಿದ್ರಿ ಎಸ್ಸೈಗಳಾದ ಸಕ್ತಿವೇಲು ಮತ್ತು ಅನಿಲ್ ಕುಮಾರ್ ಮತ್ತು ಎಎಸ್ಸೈಗಳಾದ ರಾಜೇಶ್ ಪಿ., ಗಿರೀಶ್, ಸಿಬ್ಬಂದಿ ಕೃಷ್ಣ ಪ್ರಸಾದ್, ಸಂದೇಶ್ ಕುಮಾರ್, ಜೀವನ್ ಕುಮಾರ್, ಮೋಹನ್ ಚಂದ್ರ, ರಘು, ಸತೀಶ್ ಮತ್ತು ಪ್ರದೀಪ್ ಶೆಟ್ಟಿ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!