
ಪುತ್ತೂರು :ವಾಯುಭಾರ ಕುಸಿತದ ಹಿನ್ನೆಲೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯಾಗುತ್ತಿದೆ. ಜುಲೈ26 ರವರೆಗೂ ರೆಡ್ ಅಲರ್ಟ್ ಕೊಡಲಾಗಿದೆ
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ಈ ತಾಲೂಕುಗಳಾದ್ಯಂತ ವ್ಯಾಪಕ ಮಳೆ ಮುಂದುವರೆದಿದೆ. ಈ ನಿಟ್ಟಿನಲ್ಲಿ, ಮುಂಜಾಗ್ರತಾ ಕ್ರಮವಾಗಿ ಆಯಾ ತಾಲೂಕುಗಳ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಕ್ರಮಗಳನ್ನು ಕೈಗೊಂಡಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಅದೇ ರೀತಿ, ಹವಾಮಾನ ಇಲಾಖೆ ಅಧಿಕಾರಿಗಳ ಆದೇಶದ ಅನ್ವಯ ಮೀನುಗಾರಿಕೆ ಜಂಟಿ ನಿರ್ದೇಶಕರು ಮಂಗಳೂರು ಇವರು ಪ್ರಕಟಣೆ ಹೊರಡಿಸಿ, ಅರಬ್ಬಿ ಸಮುದ್ರದಲ್ಲಿ ಮಳೆ ಮತ್ತು ಭಾರೀ ಗಾಳಿ ಬೀಸುವುದರಿಂದ ಪ್ರಕ್ಷುಬ್ಧವಾಗಿದೆ. ಆದ್ದರಿಂದ ಅನಾಹುತ ತಡೆಯುವ ಸಲುವಾಗಿ ನಾಡದೋಣಿ ಮೀನುಗಾರರು ಸೇರಿದಂತೆ ಯಾರೂ ಕೂಡ ಮೀನುಗಾರಿಕೆಗೆ ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಿದ್ದಾರೆ.
ಸಂಭಾವ್ಯ ಪ್ರವಾಹ, ಭೂ ಕುಸಿತ ಪ್ರದೇಶಗಳನ್ನು ಗುರುತಿಸಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ನೀರು ಇರುವ ತಗ್ಗು ಪ್ರದೇಶಗಳು, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು, ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸಬೇಕು. ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿ, ತೋಡುಗಳ ಮತ್ತು ವಿದ್ಯುತ್ ಕಂಬ, ತಂತಿ ಸಮೀಪ ಹೋಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಲಾಗಿದೆ.






