
ಮಂಗಳೂರು: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂತುಹಾಕಿದ ಪ್ರಕರಣದ ಸಾಕ್ಷಿ ದೂರುದಾರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪದಲ್ಲಿ ಮೃತದೇಹಗಳನ್ನು ಹೂತು ಹಾಕಿದ ಜಾಗವನ್ನು ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳಿಗೆ ಸೋಮವಾರ ತೋರಿಸಿದರು.
ಮುಖಕ್ಕೆ ಮುಸುಕು ಹಾಕಿದ್ದ ಸಾಕ್ಷಿ ದೂರುದಾರನನ್ನು ಬಿಗು ಪೋಲೀಸ್ ಭದ್ರತೆಯೊಂದಿಗೆ ಎಸ್ಐಟಿ ಅಧಿಕಾರಿಗಳು ನೇತ್ರಾವತಿ ಸ್ನಾನ ಘಟ್ಟದ ಬಳಿಗೆ ಕರೆತಂದರು.
ಇಲ್ಲಿ ನೇತ್ರಾವತಿ ನದಿ ಪಕ್ಕದಲ್ಲೇ ಇರುವ ಕಾಡಿನೊಳಗೆ ಎಸ್ಐಟಿ ಅಧಿಕಾರಿಗಳನ್ನು ಸಾಕ್ಷಿ ದೂರುದಾರ ಕರೆದೊಯ್ದು. ಆತನ ಜೊತೆಗೆ ಮೂವರು ವಕೀಲರೂ ಸ್ಥಳಕ್ಕೆ ತೆರಳಿದರು.
ಸಾಕ್ಷಿ ದೂರುದಾರನನ್ನು ಮಂಗಳೂರಿನ ಮಲ್ಲಿಕಟ್ಟೆಯ ಪ್ರವಾಸಿ ಬಂಗಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಶನಿವಾರ ಮತ್ತು ಭಾನುವಾರ ವಿಚಾರಣೆಗೆ ಒಳಪಡಿಸಿದ್ದರು.






