ಪುತ್ತೂರು, ಆ.1: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸರಕಾರಿ ಶಾಲೆಗಳಿಗೆ ಜ್ಞಾನದೀಪ ಗೌರವ ಶಿಕ್ಷಕರ ನಿಯೋಜನೆ ಹಾಗೂ ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣೆಯ ಕಾರ್ಯಕ್ರಮ ಧರ್ಮಸ್ಥಳದ ಕಚೇರಿ ಸಭಾಂಗಣದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ದೀಪ ಬೆಳಗಿಸಿ ಉದ್ಘಾಟಿಸಿದರು. ಅವರು ಮಾತನಾಡುತ್ತಾ, ಯೋಜನೆಯು ಮಹಿಳಾ ಸಬಲೀಕರಣ, ಕುಟುಂಬ ಕಲ್ಯಾಣ ಹಾಗೂ ಧಾರ್ಮಿಕ ಅಭಿವೃದ್ಧಿಗೆ ಶ್ರೇಷ್ಠ ಸೇವೆ ಸಲ್ಲಿಸುತ್ತಿದೆ ಎಂದು ಶ್ಲಾಘಿಸಿದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಸಾಜ್ ರಾಧಾಕೃಷ್ಣ ಆಳ್ವ, ಯೋಜನೆಯ ಯೋಜನೆಗಳು ಸರಕಾರದ ಯೋಜನೆಗಳಿಗೆ ಪೂರಕವಾಗಿದ್ದು, ಸಮುದಾಯ ಅಭಿವೃದ್ಧಿಗೆ ಪೂರಕವಾಗಿವೆ ಎಂದರು. ಶಿಕ್ಷಣ ಸಂಯೋಜಕ ಹರಿಪ್ರಸಾದ್, ಯೋಜನೆಯು ಎಲ್ಲ ವರ್ಗದವರಿಗೂ ಅವಕಾಶ ಒದಗಿಸುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ 14 ಬಡ ವಿದ್ಯಾರ್ಥಿಗಳಿಗೆ ರೂ.2000 ಮೌಲ್ಯದ ವಾತ್ಸಲ್ಯ ಕಿಟ್, 365 ಉನ್ನತ ವಿದ್ಯಾಭ್ಯಾಸಕ್ಕೆ ತಲಾ ರೂ.8000ರಂತೆ ಶಿಷ್ಯವೇತನ ಹಾಗೂ 55 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ಮಂಜೂರಾತಿ ಪತ್ರ ವಿತರಣೆ ನಡೆಯಿತು.

ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮಹಾಬಲ ರೈ ವಲತ್ತಡ್ಕ, ಮಹಾಬಲ ಕುಲಾಲ್, ಎ.ಬಾಬು ನಾಯ್ಕ ಸೇರಿದಂತೆ ಹಲವಾರು ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ತಾಲೂಕು ಯೋಜನಾಧಿಕಾರಿ ಶಶಿಧರ್ ಎಂ. ಸ್ವಾಗತಿಸಿದರು, ಕಾವ್ಯಶ್ರೀ ವಂದಿಸಿದರು, ಶಿಕ್ಷಕಿ ಚಂದ್ರಕಲಾ ಪ್ರಾರ್ಥನೆ ನಿರ್ವಹಿಸಿದರು. ಶಿಕ್ಷಕರು ಅತಿಥಿಗಳಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು.

Leave a Reply

Your email address will not be published. Required fields are marked *

Join WhatsApp Group
error: Content is protected !!