ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಐವರು ಸಾವನ್ನಪ್ಪಿರುವಂತಹ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಗರ್ತಪೇಟೆಯಲ್ಲಿ ನಡೆದಿದೆ.

ದುರಂತದಲ್ಲಿ ಮದನ್ (38), ಪತ್ನಿ ಸಂಗೀತಾ (33) ಮಿತೇಶ್ (8), ವಿಹಾನ್ (5) ಒಂದೇ ಕುಟುಂಬದವರು ಸಜೀವ ದಹನವಾಗಿದ್ದಾರೆ, ಮತ್ತೊಂದು ಮಹಡಿಯಲ್ಲಿ ಸುರೇಶ್‌ ಎಂಬವರೂ ಸುಟ್ಟು ಕರಕಲಾಗಿದ್ದಾರೆ.

ಘಟನಾ ಸ್ಥಳಕ್ಕೆ ನಗರ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಭೇಟಿ ನೀಡಿ ಪರಿಶೀಲಿಸಿದ್ದಾರೆ. ರಾತ್ರಿ 2.30ರ ಸುಮಾರಿಗೆ ಅಗ್ನಿ ಅವಗಢ ಸಂಭವಿಸಿದ ಮಾಹಿತಿ ಬಂತು. ಅಗ್ನಿಶಾಮಕ ದಳದವರು ಹಾಗೂ ನಮ್ಮ ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ.

ಗ್ರೌಂಡ್ ಫ್ಲೋರ್ ನಲ್ಲಿರುವ ಗೋಡೌನ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಂತರ ಅದು ಮೇಲಿನ ಫ್ಲೋರ್ ಗಳಿಗೆ ಆವರಿಸಿದೆ. ಬೆಂಕಿ ಹೊತ್ತಿಕೊಂಡ ಕೂಡಲೇ ಕಟ್ಟಡದಲ್ಲಿದ್ದ ಬಹುತೇಕ ಜನ ಓಡಿ ಹೋಗಿದ್ದಾರೆ. ಆದರೆ ದುರಾದೃಷ್ಟವಂತ ಕುಟುಂಬ ಬೆಂಕಿಗೆ ಆಹುತಿಯಾಗಿದೆ.

ರಕ್ಷಣಾ ಕಾರ್ಯಾಚರಣೆ ಮುಂದುವರಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ, ವಿಧಿವಿಜ್ಞಾನ ಪ್ರಯೋಗಾಲಯ ಅಧಿಕಾರಿಗಳು ಹಾಗೂ ನಮ್ಮ ರಕ್ಷಣಾ ತಂಡದವರು ಕಾರ್ಯಾಚರಣೆ ಮಾಡ್ತಿದ್ದಾರೆ. ಇನ್ನು ಮೃತದೇಹಗಳು ಇರುವ ಶಂಕೆ ಇದೆ ಎಂದು ತಿಳಿಸಿದ್ದಾರೆ.

ಕೆ. ಆರ್ ಮಾರ್ಕೆಟ್ ಬಳಿಯ ನಗರ್ತಪೇಟೆಯ ವಾಣಿಜ್ಯ ಕಟ್ಟಡದಲ್ಲಿದ್ದ ಮಹಡಿ ಮನೆಯಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಡಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ್ದ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಸ್ಥಳದಲ್ಲಿ ಅಂಬುಲೆನ್ಸ್‌ಗಳನ್ನ ನಿಯೋಜನೆ ಮಾಡಲಾಗಿದೆ. ಇನ್ನೂ ಸ್ಥಳಕ್ಕೆ ಭೇಟಿ ನೀಡಿದ ಸಚಿವ ಜಮೀರ್ ಅಹ್ಮಮದ್ ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದಾರೆ. ಇದು ವಯಕ್ತಿಕ ಪರಿಹಾರವಾಗಿದ್ದು ಸರ್ಕಾರದಿಂದಲೂ ಸಂತ್ರಸ್ತರ ಕುಟುಂಬಕ್ಕೆ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.

ಸದ್ಯ ಸ್ಥಳಕ್ಕೆ ಚಿಕ್ಕಪೇಟೆ ಶಾಸಕ‌ ಉದಯ್ ಗರುಡಾಚಾರ್ ಮತ್ತು ಪೂರ್ವ ವಿಭಾಗ ಜಂಟಿ ಪೊಲೀಸ್ ಆಯುಕ್ತ ವಂಶಿಕೃಷ್ಣ ಭೇಟಿ ನೀಡಿ ಪರಿಶೀಲನೆ ಮಾಡಿದರು. ಕಟ್ಟಡದ ಬಳಿ ದಟ್ಟ ಹೊಗೆ ಆವರಿಸಿಕೊಂಡಿದೆ. ಹೊಗೆಯಿಂದಾಗಿ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆಗೂ ಕಷ್ಟವಾಗುತ್ತಿದೆ. ಪ್ಲಾಸ್ಟಿಕ್ ವಸ್ತು ಇರುವುದರಿಂದ ಕಟ್ಟಡದ ಒಳಗೆ ಹೊಗೆ ಆವರಿಸಿಕೊಂಡಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!