2012ರಲ್ಲಿ ಅತ್ಯಾಚಾರ ಒಳಗಾಗಿ ಕೊಲೆಯಾದ ಸೌಜನ್ಯ ಮನೆಗೆ ಸೋಮವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭೇಟಿ ನೀಡಿ, ನ್ಯಾಯಕ್ಕಾಗಿ ಕುಟುಂಬ ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.

ಇಂದು ಧರ್ಮಸ್ಥಳದಲ್ಲಿ ನಡೆದ ಬಿಜೆಪಿ ಸಮಾವೇಶದ ಬಳಿಕ ವಿಜಯೇಂದ್ರ ಅವರು ನೇರವಾಗಿ ಧರ್ಮಸ್ಥಳ ಗ್ರಾಮದ ಪಾಂಗಳದಲ್ಲಿರುವ ಸೌಜನ್ಯ ಮನೆಗೆ ತೆರಳಿದರು.

ಅಲ್ಲಿ ಸೌಜನ್ಯ ತಾಯಿ ಕುಸುಮಾವತಿ ಅವರೊಂದಿಗೆ ಮಾತುಕತೆ ನಡೆಸಿದರು.

ತಮ್ಮ ಮಗಳ ಸಾವಿಗೆ ನ್ಯಾಯ ಕೇಳಿದ್ದಕ್ಕಾಗಿ ತಮ್ಮನ್ನು ಗುರಿಯಾಗಿಸಲಾಗುತ್ತಿದೆ ಎಂದು ಕುಸುಮಾವತಿ ಹೇಳಿದರು. “ನ್ಯಾಯ ಕೋರಿದ್ದಕ್ಕಾಗಿಯೇ ನಮ್ಮ ಮೇಲೆ ದಬ್ಬಾಳಿಕೆ ಮಾಡಲಾಗುತ್ತಿದೆ. ನಿಮ್ಮ ಪಕ್ಷದವರೇ ನಾವು ದೊಡ್ಡ ಮನೆ ಕಟ್ಟಿದ್ದೇವೆ ಮತ್ತು ಸೌಜನ್ಯ ಅವರ ಹೆಸರನ್ನು ಬಳಸಿಕೊಂಡು ಹಣ ಸಂಪಾದಿಸುತ್ತಿದ್ದೇವೆ ಎಂದು ಟೀಕಿಸುತ್ತಿದ್ದಾರೆ. ನಮಗೆ ಯಾವುದೇ ನ್ಯಾಯ ಸಿಗುತ್ತಿಲ್ಲ” ಎಂದು ವಿಜಯೇಂದ್ರ ವಿರುದ್ಧವೇ ಕುಸುಮಾವತಿ ಕಿಡಿ ಕಾರಿದರು.

ಅಪರಾಧಿಗಳಿಗೆ ಶಿಕ್ಷೆಯಾಗಬೇಕು ಎಂದು ನಾವು ಒತ್ತಾಯಿಸಿದಾಗ ನಮ್ಮ ಕುಟುಂಬಕ್ಕೆ ಪರೋಕ್ಷವಾಗಿ ಬೆದರಿಕೆಗಳು ಬಂದವು. ಈ ಮೂಲಕ ನಮ್ಮ ಬಾಯಿ ಮುಚ್ಚಿಸುವ ಪ್ರಯತ್ನಗಳು ನಡೆದಿವೆ ಎಂದು ಕುಸುಮಾವತಿ ಕಣ್ಣೀರು ಹಾಕಿದರು.

ನಿಮ್ಮ ಮಗಳ ಪ್ರಾಣಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ವಿಜಯೇಂದ್ರ ಅವರು ಕುಸುಮಾವತಿ ಅವರಿಗೆ ತಿಳಿಸಿದರು. ಅಲ್ಲದೆ “ಸಿಬಿಐ ನ್ಯಾಯಾಲಯದ ಆದೇಶದ ವಿರುದ್ಧ ನೀವು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದರೆ ನಾವು ಬೆಂಬಲ ನೀಡುತ್ತೇವೆ” ಎಂದು ಹೇಳಿದರು.

ಬಿಜೆಪಿ ಇದನ್ನು ಮೊದಲೇ ಮಾಡಬಹುದಿತ್ತು ಎಂದು ಕುಟುಂಬದ ಸದಸ್ಯರೊಬ್ಬರು ಹೇಳಿದಾಗ, ವಿಜಯೇಂದ್ರ ಪ್ರತಿಕ್ರಿಯಿಸಿ, “ನಾವು ಮಗುವನ್ನು ಮರಳಿ ತರಲು ಸಾಧ್ಯವಿಲ್ಲ. ಆದರೆ ನೀವು ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣದ ವಿರುದ್ಧ ಹೋರಾಡಲು ನಿರ್ಧರಿಸಿದರೆ ನಮ್ಮ ಪಕ್ಷ ಮತ್ತು ನಾನು ಎಲ್ಲಾ ರೀತಿಯ ಬೆಂಬಲ ನೀಡುತ್ತೇವೆ” ಎಂದು ಭರವಸೆ ನೀಡಿದರು.

Leave a Reply

Your email address will not be published. Required fields are marked *

Join WhatsApp Group
error: Content is protected !!