
ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರು ಜೈಲುಪಾಲಾಗಿ ಏಳು ವರ್ಷಗಳು ಪೂರ್ಣಗೊಂಡಿದ್ದು, ಅವರ ಪತ್ನಿ ಶ್ವೇತಾ ಭಟ್ ಅವರು ಈ ಕುರಿತು ತಮ್ಮ ಎಕ್ಸ್ (X) ಖಾತೆಯಲ್ಲಿ ನೋವು ತೋಡಿಕೊಂಡಿದ್ದಾರೆ. ಪ್ರಾಮಾಣಿಕ ಅಧಿಕಾರಿಯಾಗಿ ಸತ್ಯದ ಪರ ನಿಂತಿದ್ದಕ್ಕೆ ತಮ್ಮ ಪತಿಯನ್ನು ತಪ್ಪಾಗಿ ಬಂಧಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಇದೇ ವೇಳೆ, ದೇಶದಲ್ಲಿ ಅತ್ಯಾಚಾರಿಗಳು ಮತ್ತು ಕೊಲೆಗಾರರು ಮುಕ್ತವಾಗಿ ಓಡಾಡುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಸಂಜೀವ್ ಭಟ್ ಅವರು ತಮ್ಮ ಏಕೈಕ ಅಪರಾಧವಾದ ‘ಧೈರ್ಯ’ಕ್ಕಾಗಿ ಶಿಕ್ಷೆ ಅನುಭವಿಸುತ್ತಿದ್ದಾರೆ ಎಂದು ಶ್ವೇತಾ ಭಟ್ ತಿಳಿಸಿದ್ದಾರೆ. ‘ಕೇವಲ ಸತ್ಯ ಹೇಳಿದ್ದಕ್ಕೆ ಒಬ್ಬ ವ್ಯಕ್ತಿಯಿಂದ ಏಳು ವರ್ಷಗಳನ್ನು ಕದಿಯಲಾಗಿದೆ. ಈ ಏಳು ವರ್ಷಗಳಲ್ಲಿ ಅತ್ಯಾಚಾರಿಗಳು, ಕೊಲೆಗಾರರು ಮತ್ತು ಗುಂಪು ಥಳಿತದ ಆರೋಪಿಗಳು ಮುಕ್ತವಾಗಿ ಓಡಾಡುತ್ತಿದ್ದಾರೆ. ಆದರೆ ಆತ್ಮಸಾಕ್ಷಿಯ ವ್ಯಕ್ತಿ ಜೈಲಿನಲ್ಲಿ ಕೊಳೆಯುತ್ತಿದ್ದಾರೆ,’ ಎಂದು ಅವರು ತಮ್ಮ ಪೋಸ್ಟ್ನಲ್ಲಿ ಉಲ್ಲೇಖಿಸಿದ್ದಾರೆ.






