
ಉಡುಪಿ : ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸಿದ ಹಿನ್ನೆಲೆಯಲ್ಲಿ ಮೂವರು ಶಿಕ್ಷಕಿಯರನ್ನು ಉಡುಪಿ ಜಿಲ್ಲಾಧಿಕಾರಿ ಅಮಾನತು ಮಾಡಿದ್ದಾರೆ.
ಸಮೀಕ್ಷೆ ಕಾರ್ಯಕ್ಕೆ ಗಣತಿದಾರರಾಗಿ ಶಿಕ್ಷಕಿಯರಾದ ಸುರೇಖಾ, ರತ್ನ ಹಾಗೂ ಪ್ರಭಾ ಬಿ.ರನ್ನು ನೇಮಕ ಮಾಡಲಾಗಿತ್ತು. ಆದರೆ ಇವರು ನೇಮಕಾತಿ ಆದೇಶವನ್ನು ಸ್ವೀಕರಿಸದೇ, ಹಲವಾರು ಬಾರಿ ದೂರವಾಣಿ ಮೂಲಕ ಸಂಪರ್ಕಿಸಿದರೂ ಪ್ರತಿಕ್ರಿಯೆ ನೀಡಲಿಲ್ಲ.
ಇದರ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಶಿಕ್ಷಕಿಯರಿಗೆ ನೋಟಿಸ್ ನೀಡಿದರೂ, ಉತ್ತರ ನೀಡದ ಕಾರಣ ಅಕ್ಟೋಬರ್ 4ರಂದು ಅಮಾನತ್ತು ಆದೇಶ ಹೊರಡಿಸಲಾಗಿದೆ.
ಸಮೀಕ್ಷೆ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದರೆ ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.






