
ಪುತ್ತೂರು:ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ)ಯಡಿ ಕೆಲಸ ಮಾಡುತ್ತಿರುವ ಕೂಲಿಕಾರರ ಆಧಾರ್ ಇ-ಕೆವೈಸಿ ಪ್ರಕ್ರಿಯೆಯನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಈ ಕುರಿತು ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದಿಂದ ಸುತ್ತೋಲೆ ಹೊರಡಿಸಲಾಗಿದ್ದು, ಅಕ್ಟೋಬರ್ 30ರೊಳಗೆ ಎಲ್ಲಾ ಸಕ್ರಿಯ ಉದ್ಯೋಗ ಚೀಟಿದಾರರು ಇ-ಕೆವೈಸಿ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ.
ಇ-ಕೆವೈಸಿ ಪ್ರಕ್ರಿಯೆ ಎನ್ಎಂಎಂಎಸ್ (ನ್ಯಾಷನಲ್ ಮೊಬೈಲ್ ಮಾನಿಟರಿಂಗ್ ಸಿಸ್ಟಂ) ಅಪ್ಲಿಕೇಶನ್ ಮೂಲಕ ನಡೆಯಲಿದ್ದು, ಫಲಾನುಭವಿಗಳ ಮುಖ ಸೆರೆ ಹಿಡಿಯುವ ಮೂಲಕ ಪ್ರಕ್ರಿಯೆ ಸಂಪೂರ್ಣಗೊಳ್ಳಲಿದೆ. ಈ ಸೇವೆಯನ್ನು ಗ್ರಾಮ ಪಂಚಾಯತ್ ಮಟ್ಟದಲ್ಲೇ ಮಾಡಬೇಕಾಗಿರುವುದರಿಂದ ಎಲ್ಲಾ ಸಕ್ರಿಯ ಫಲಾನುಭವಿಗಳು ತಮ್ಮ ಗ್ರಾಮ ಪಂಚಾಯತ್ ಕಚೇರಿಗೆ ಹಾಜರಾಗಿ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಪುತ್ತೂರು ತಾಲೂಕು ಪಂಚಾಯತ್ ಪ್ರಕಟಣೆಯಲ್ಲಿ ಕೋರಲಾಗಿದೆ.






