
ಪುತ್ತೂರು: ಬೆಂಗಳೂರಿನಲ್ಲಿ ಬಡವರ ಮನೆಗಳನ್ನು ದ್ವಂಸಗೊಳಿಸಿ ಬುಲ್ಡೋಝರ್ ರಾಜಕೀಯ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ನಗರ ದರ್ಬೆ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಸ್ಡಿಪಿಐ ಬೆಳ್ಳಾರೆ ಬ್ಲಾಕ್ ಅಧ್ಯಕ್ಷ ಎಂ.ಎ. ರಫೀಕ್, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ಪಂಚ ಗ್ಯಾರಂಟಿಗಳ ಹೆಸರಿನಲ್ಲಿ ಮುಸ್ಲಿಂ ಸಮುದಾಯ ಸೇರಿದಂತೆ ಬಡವರನ್ನು ಮೋಸಗೊಳಿಸಿರುವ ಕಾಂಗ್ರೆಸ್, ಅಧಿಕಾರಕ್ಕೆ ಬಂದ ಬಳಿಕ ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ಬೆಂಗಳೂರಿನಲ್ಲಿ ಬಡವರ ಆಶ್ರಯವಾಗಿದ್ದ ಮನೆಗಳನ್ನು ನೆಲಸಮಗೊಳಿಸುವ ಮೂಲಕ ಸರ್ಕಾರ ಸರ್ವಾಧಿಕಾರಿ ಧೋರಣೆಯನ್ನು ಪ್ರದರ್ಶಿಸುತ್ತಿದೆ” ಎಂದು ಅವರು ಆರೋಪಿಸಿದರು.
ಪ್ರತಿಭಟನೆಯಲ್ಲಿ ಎಸ್ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಅಶ್ರಫ್ ಬಾವು, ಉಪಾಧ್ಯಕ್ಷ ಸುಲೈಮಾನ್ ಬಿ.ಕೆ., ಕೋಶಾಧಿಕಾರಿ ಎಂ.ಎಚ್. ಸದ್ದಾಂ ಮುರ ಸೇರಿದಂತೆ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.
ಅಲ್ಲದೆ ಎಸ್ಡಿಪಿಐ ವಿಟ್ಲ ಬ್ಲಾಕ್ ಅಧ್ಯಕ್ಷ ಕಮರುದ್ದೀನ್ ಪುಣಚ, ಕಬಕ ಬ್ಲಾಕ್ ಅಧ್ಯಕ್ಷ ಸಿದ್ದೀಕ್ ಉರಿಮಜಲು, ಪುತ್ತೂರು ನಗರ ಸಮಿತಿ ಉಪಾಧ್ಯಕ್ಷ ಶಮೀರ್ ನಾಜೂಕು ಹಾಗೂ ಕಾರ್ಯಕರ್ತರು ಪಾಲ್ಗೊಂಡು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಕಾರ್ಯಕ್ರಮದಲ್ಲಿ ಕ್ಷೇತ್ರ ಸಂಯುಕ್ತ ಕಾರ್ಯದರ್ಶಿ ರಹೀಂ ಪುತ್ತೂರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಅದ್ದು ಕೊಡಿಪ್ಪಾಡಿ ಧನ್ಯವಾದ ಸಮರ್ಪಿಸಿದರು.






