
ಬೆಂಗಳೂರು:ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದ.ಕ.ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿದ್ದ ಪುತ್ತೂರು ಉಪವಿಭಾಗಾಧಿಕಾರಿ ಆದೇಶಕ್ಕೆ ತಾತ್ಕಾಲಿಕ ತಡೆಯಾಜ್ಞೆ ನೀಡಿರುವ ಹೈಕೋರ್ಟ್, ತಿಮರೋಡಿ ಸಲ್ಲಿಸಿರುವ ಆಕ್ಷೇಪಣೆಗಳನ್ನು ಪರಿಗಣಿಸಿ, ಕಾನೂನು ಪ್ರಕ್ರಿಯೆ ಅನುಸರಿಸಿ ಹೊಸದಾಗಿ ಆದೇಶಿಸುವಂತೆ
ಉಪವಿಭಾಗಾಧಿಕಾರಿಯವರಿಗೆ ನಿರ್ದೇಶಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ 2025ರ ಡಿಸೆಂಬರ್ 17ರಂದು ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಹೊರಡಿಸಿದ್ದ ಆದೇಶ ರದ್ದುಕೋರಿ ಮಹೇಶ್ ಶೆಟ್ಟಿ ತಿಮರೋಡಿಸಲ್ಲಿಸಿದ್ದ ಅರ್ಜಿಯನ್ನು ಶನಿವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ನಿರ್ದೇಶನ ನೀಡಿದೆ.ಗಡಿಪಾರು ಪ್ರಕರಣದಲ್ಲಿ ಈ ಹಿಂದೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರತಿವಾದಿಯಾಗಿರುವ ಉಪ ವಿಭಾಗಾಧಿಕಾರಿಗಳು ಅನುಸರಿಸಿಲ್ಲ. ಖುಲಾಸೆಯಾಗಿರುವ ಪ್ರಕರಣಗಳನ್ನು ಉಲ್ಲೇಖಿಸಿ, ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದ್ದು, ಅದಕ್ಕೆ ಅರ್ಜಿದಾರರು ಸಲ್ಲಿಸಿರುವ ಆಕ್ಷೇಪಣೆಗಳನ್ನು ಪರಿಗಣಿಸದೆ, ವಿವೇಚನಾರಹಿತವಾಗಿ ಆದೇಶ ಹೊರಡಿಸಲಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.ಆದ್ದರಿಂದ, ಪ್ರಕರಣವನ್ನು ಮತ್ತೆ ಉಪವಿಭಾಗಾಧಿಕಾರಿಗೆ ಹಿಂದಿರುಗಿಸಲಾಗುತ್ತಿದೆ.ನ್ಯಾಯಾಲಯದ ಈ ಆದೇಶದ ಪ್ರತಿ ದೊರೆತ 3 ವಾರಗಳ ಒಳಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿದಾರರು ಸಲ್ಲಿಸಿರುವ ಆಕ್ಷೇಪಣೆಯನ್ನು ಪರಿಗಣಿಸಿ, ಉಪವಿಭಾಗಧಿಕಾರಿಗಳು ಕಾನೂನು ಪ್ರಕಾರ ಸೂಕ್ತ ಆದೇಶ ಹೊರಡಿಸಬೇಕು ನ್ಯಾಯಪೀಠ ಆದೇಶಿಸಿದೆ.






