
ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಶಾಖೆಯಲ್ಲಿರುವ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ಧ ಸಹಕಾರಿ ಸಂಘದಲ್ಲಿ ನಕಲಿ ಚಿನ್ನ ಅಡವಿಟ್ಟು ಸಾಲ ಪಡೆಯಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಬಂಟ್ವಾಳ ತಾಲೂಕಿನ ಬೋಳಂತೂರು ಗ್ರಾಮದ ಪ್ರಮೋದ್ ಪಿ. (50) ಹಾಗೂ ಕುಳಿ ಗ್ರಾಮದ ಅಬ್ದುಲ್ ನಝೀರ್ (43) ಎಂದು ಗುರುತಿಸಲಾಗಿದೆ.
ಪ್ರಕರಣದ ವಿವರ:
ಫೆ. 2ರಂದು ಬೆಳಿಗ್ಗೆ ಮಡಂತ್ಯಾರು ಶಾಖೆಗೆ ಇಬ್ಬರು ಗ್ರಾಹಕರು ಆಗಮಿಸಿದ್ದು, ಅಬ್ದುಲ್ ನಝೀರ್ ಹೆಸರಿನಲ್ಲಿ ಚಿನ್ನದ ಸರಗಳನ್ನು ಅಡವಿಟ್ಟು ಸಾಲ ಪಡೆಯುವುದಾಗಿ ತಿಳಿಸಿದ್ದರು. ಈ ಸಂದರ್ಭ ಮೂವರು ಚಿನ್ನದ ಸರಗಳನ್ನು ಬ್ಯಾಂಕ್ ಸಿಬ್ಬಂದಿಗೆ ನೀಡಲಾಗಿದೆ. ಸಂಶಯದ ಹಿನ್ನೆಲೆಯಲ್ಲಿ ಚಿನ್ನವನ್ನು ಪರಿವೀಕ್ಷಕರಿಂದ ಪರಿಶೀಲನೆ ನಡೆಸಿದಾಗ, ಮೂರು ಚಿನ್ನದ ಸರಗಳು ನಕಲಿ ಎಂಬುದು ದೃಢಪಟ್ಟಿದೆ.
ಈ ಕುರಿತು ಶಾಖಾ ವ್ಯವಸ್ಥಾಪಕರು ನೀಡಿದ ದೂರಿನ ಮೇರೆಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣ ಸಂಖ್ಯೆ 11/2026, ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 318(4), 62 ಹಾಗೂ 3(5) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.






