
ಬೆಂಗಳೂರು: ನಂದಿನಿ ಹಾಲಿನ ಉತ್ಪನ್ನಗಳ ಕುರಿತು ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮೂಲಕ ಅಪಪ್ರಚಾರ ಮಾಡಿದ ಅರೋಪದಡಿ ವೈದ್ಯೆ ಶರಣ್ಯ ಪದ್ಮ ವಿರುದ್ಧ ಮಲ್ಲೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪದ್ಮಾವತಿ ಎಂಬುವರು ನೀಡಿದ ದೂರು ಆಧರಿಸಿ ಬಿಎನ್ಎಸ್ ಕಾಯ್ದೆ 353 (1) ಬಿ ಪ್ರಕಾರ ಸುಳ್ಳು ಮಾಹಿತಿ ಪ್ರಕರಣದಡಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಖಾಸಗಿ ಆಸ್ಪತ್ರೆಯೊಂದರಲ್ಲಿ ಚರ್ಮರೋಗ ತಜ್ಞೆಯಾಗಿರುವ ಶರಣ್ಯ ಅವರು ಫೆ.8ರಂದು ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮೂಲಕ ನಂದಿನಿ ಹಾಲಿನ ಉತ್ಪನ್ನಗಳ ಬಗ್ಗೆ ಅಪಪ್ರಚಾರ ಮಾಡಿದ್ದರು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಖುದ್ದು ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್ ) ಸ್ಪಷ್ಪನೆ ನೀಡಿತ್ತು.
ರೀಲ್ಸ್ ನಲ್ಲಿ ವೈದ್ಯೆ ಹೇಳಿದ್ದೇನು?: ನಂದಿನಿ ಉತ್ಪನ್ನಗಳಾದ ಕ್ರೀಮ್ ಬನ್, ಸ್ಟ್ರಾಬೆರಿ ಪ್ಲೇವರ್ಡ್ ಮಿಲ್ಸ್ ಹಾಗೂ ಸ್ಪಾಶ್ ಪಾನೀಯ ಉತ್ಪನ್ನಗಳು ವಿಷಕಾರಿ ಹಾಗೂ ರಾಸಾಯನಿಕಯುಕ್ತವಾಗಿದೆ. ದೀರ್ಘಾವಧಿಯಲ್ಲಿ ಇವುಗಳ ಸೇವನೆಯಿಂದ ಭವಿಷ್ಯದಲ್ಲಿ ಕ್ಯಾನ್ಸರ್ ಬರಲಿದೆ. ಅಲ್ಲದೇ ಈ ಉತ್ಪನ್ನಗಳಲ್ಲಿ ನೈಸರ್ಗಿಕವಾಗಿ ಮಾಡದೆ ಕೃತಕ ಬಣ್ಣ ಬೆರೆಸಿ ತಯಾರಿಸಿದ್ದಾರೆ. ಎಫ್ಎಸ್ ಎಸ್ ಎಐ ನಂದಿನಿ ಉತ್ಪನ್ನಗಳ ತಯಾರಿಕೆಗೆ ಹೇಗೆ ಅನುಮತಿ ನೀಡಿದ್ದಾರೆ ಎಂದು ಪ್ರಶ್ನಿಸಿದ್ದರು.
ಕೆಎಂಎಫ್ ಸರ್ಕಾರಿ ಸ್ವಾಮ್ಯವಾಗಿದ್ದು, ಉತ್ಪನ್ನಗಳ ಉತ್ಪಾದನೆ ಹಾಗೂ ಮಾರ್ಕೆಟಿಂಗ್ ಮಾಡಿ ಲಾಭ ಮಾಡುತ್ತಿರುವ ಬಗ್ಗೆ ಭ್ರಮೆಯಲ್ಲಿ ಸರ್ಕಾರವಿದೆ. ಹೀಗಾಗಿ ಕೆಎಂಎಫ್ ರೀತಿಯ ಉತ್ಪನ್ನಗಳನ್ನ ಮಾರುಕಟ್ಟೆಗೆ ಬಿಡಬಾರದು ಎಂದು ರೀಲ್ಸ್ ನಲ್ಲಿ ವೈದ್ಯೆ ಹೇಳಿರುವುದಾಗಿ ಎಫ್ಐಆರ್ ನಲ್ಲಿ ದಾಖಲಿಸಲಾಗಿದೆ







