
ಬೆಂಗಳೂರು: ನಗರದ ಕಾಚರಕನಹಳ್ಳಿ ಪ್ರದೇಶದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯ ಮಹಿಳಾ ಉದ್ಯೋಗಿಗೆ ಅಶ್ಲೀಲ ಹಾಗೂ ಅನುಚಿತ ಸಂದೇಶಗಳನ್ನು ಕಳುಹಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
40 ವರ್ಷದ ಮಹಿಳೆ ಎಸ್ಬಿಐ ಕಾಚರಕನಹಳ್ಳಿ ಶಾಖೆಯಲ್ಲಿ ಸೀನಿಯರ್ ಅಸೋಸಿಯೇಟ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ದೂರಿನ ಪ್ರಕಾರ, ಮಾರ್ಚ್ 10ರಂದು ಕೆ.ಆರ್. ರವಿ ಶೆಟ್ಟಿ ಎಂಬ ವ್ಯಕ್ತಿ ಇಂಟರ್ನೆಟ್ ಬ್ಯಾಂಕಿಂಗ್ ಸೇವೆಗಳ ಕುರಿತು ಮಾಹಿತಿ ಪಡೆಯಲು ಬ್ಯಾಂಕ್ಗೆ ಭೇಟಿ ನೀಡಿದ್ದನು. ಮಾತುಕತೆಯ ವೇಳೆ ತನ್ನ ವ್ಯವಹಾರ ಚಟುವಟಿಕೆಗಳ ಬಗ್ಗೆ ಮಾತನಾಡಿದ ಆತ, ತನ್ನ ಮೊಬೈಲ್ ಸಂಖ್ಯೆಯನ್ನು ನೀಡಿ ಮಿಸ್ಡ್ ಕಾಲ್ ಮಾಡುವಂತೆ ಕೇಳಿದ್ದಾನೆ.
ಅದೇ ದಿನ ರಾತ್ರಿ ಸುಮಾರು 8 ಗಂಟೆಯ ವೇಳೆಗೆ ಮಹಿಳೆಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಲು ಆರಂಭಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರೂ ಆರೋಪಿಯು ಅನಗತ್ಯ ಸಂದೇಶಗಳನ್ನು ಕಳುಹಿಸುವುದನ್ನು ಮುಂದುವರೆಸಿದ್ದಾನೆ ಎನ್ನಲಾಗಿದೆ.
ಘಟನೆ ಕುರಿತು ಬ್ಯಾಂಕ್ನ ಮುಖ್ಯ ವ್ಯವಸ್ಥಾಪಕರಿಗೆ ಮಾಹಿತಿ ನೀಡಲಾಗಿದ್ದು, ಅವರು ಆರೋಪಿಯನ್ನು ಸಂಪರ್ಕಿಸಿದ್ದಾರೆ. ಬ್ಯಾಂಕ್ಗೆ ಬಂದು ಕ್ಷಮೆಯಾಚಿಸುವುದಾಗಿ ಆತ ತಿಳಿಸಿದ್ದಾನೆ. ಆದರೆ ನಂತರವೂ ಮುಖ್ಯ ವ್ಯವಸ್ಥಾಪಕರಿಗೂ ಅನುಚಿತ ಸಂದೇಶಗಳನ್ನು ಕಳುಹಿಸಿದ್ದಾನೆ ಎಂದು ತಿಳಿದುಬಂದಿದೆ.
ಈ ಹಿನ್ನೆಲೆಯಲ್ಲಿ ಮಹಿಳೆ ಪೊಲೀಸರನ್ನು ಸಂಪರ್ಕಿಸಿದ್ದು, ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 75(2) ಅಡಿಯಲ್ಲಿ ಎಫ್ಐಆರ್ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.









