ಸುಳ್ಯ, ಮಾ.26: 2018ರಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣದಲ್ಲಿ ಆರೋಪಿಯಾಗಿದ್ದ ತುಮಕೂರು ನಿವಾಸಿ ಅಶ್ವನ್ ಗೌಡ ಜೆ.ಪಿ.ಗೆ ಮಾನ್ಯ ನ್ಯಾಯಾಲಯ ಒಂದು ವರ್ಷ ಸಾದಾರಣ ಕಾರಾಗೃಹ ಶಿಕ್ಷೆ ಹಾಗೂ ₹1,000 ದಂಡ ವಿಧಿಸಿ ಆದೇಶ ಹೊರಡಿಸಿದೆ.
ದಿನಾಂಕ 16/05/2018ರಂದು ರಾತ್ರಿ ಸಂಭವಿಸಿದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಸೂಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಂ.25/2018, ಭಾರತೀಯ ದಂಡ ಸಂಹಿತೆ ಕಲಂ 379ರಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ವೇಳೆ ಆರೋಪಿಯ ವಿರುದ್ಧ ಆರೋಪ ಸಾಬೀತಾಗಿದ್ದು, ನ್ಯಾಯಾಲಯವು ಪ್ರೊಬೆಷನ್ ಆಫ್ ಆಫೆಂಡರ್ಸ್ ಕಾಯ್ದೆ (PO Act) ಅಡಿಯಲ್ಲಿ ಬಿಡುಗಡೆ ಮಾಡಿತ್ತು.
ಆದರೆ ಬಳಿಕ ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದರಿಂದ ವಾರೆಂಟ್ ಜಾರಿಗೊಂಡಿತ್ತು. ದಿನಾಂಕ 24/03/2026ರಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ 369 ಮಹೇಶ್ ಹಾಗೂ ಪೊಲೀಸ್ ಕಾನ್ಸ್ಟೇಬಲ್ 475 ಕಿರಣ ಅವರ ತಂಡ ತುಮಕೂರು ಜಿಲ್ಲೆಯ ಗುಂಗೂರುಮಳೆ ಪ್ರದೇಶದಲ್ಲಿ ಆರೋಪಿಯನ್ನು ಬಂಧಿಸಿ, ಸೂಳ್ಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಹಾಗೂ ಜೆಎಂಎಫ್ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಶಿವಣ್ಣ ಎಚ್.ಆರ್. ಅವರು ಆರೋಪಿಗೆ ಭಾರತೀಯ ದಂಡ ಸಂಹಿತೆ ಕಲಂ 380ರಡಿ ಒಂದು ವರ್ಷ ಸಾದಾರಣ ಕಾರಾಗೃಹ ಶಿಕ್ಷೆ ಹಾಗೂ ₹1,000 ದಂಡ ವಿಧಿಸಿದರು. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 10 ದಿನಗಳ ಕಾರಾಗೃಹ ಶಿಕ್ಷೆ ಅನುಭವಿಸಬೇಕೆಂದು ಆದೇಶಿಸಲಾಗಿದೆ.
ಈ ಪ್ರಕರಣದಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕಿ ಪ್ರೀತಿ ಎಂ.ಸಿ. ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದರು.














