ಕಿನ್ಯ ಅಜ್ಜಿನಡ್ಕ ನಿವಾಸಿ, ರೌಡಿ ಶೀಟರ್ ಆರಿಫ್ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಮಂಗಳೂರು ಪೊಲೀಸರು, ಕೃತ್ಯದಲ್ಲಿ ಭಾಗಿಯಾಗಿದ್ದ ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಕೊಲೆಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಂಚು ರೂಪಿಸಿರುವುದು ಪೊಲೀಸರ ತನಿಖೆಯಿಂದ ಬಯಲಾಗಿದೆ.

ಕೊಲೆ ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿದ್ದ ರಿಫಾತ್, ಜುಟ್ಟು ಅಶ್ಫಾಕ್, ಖಲೀಲ್, ಶಾಕಿರ್, ಇರ್ಫಾನ್, ರಿಝ್ವಾನ್ ಹಾಗೂ ಆರೋಪಿಗಳಿಗೆ ಆಶ್ರಯ ನೀಡಿ ಸಹಕರಿಸಿದ್ದ ಇರ್ಷಾದ್ ಬಂಧಿತರು ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಮಾರ್ಚ್ 27ರಂದು ಬೆಳಿಗ್ಗೆ ಆರಿಫ್ ಬೈಕ್‌ನಲ್ಲಿ ದಕ್ಕೆ ಮೀನು ಮಾರುಕಟ್ಟೆಗೆ ತೆರಳುತ್ತಿದ್ದಾಗ, ಕಾರಿನಲ್ಲಿ ಹಿಂಬಾಲಿಸಿದ ಆರು ಮಂದಿ ಆರೋಪಿಗಳ ತಂಡ ತೊಕ್ಕೊಟ್ಟು ಫ್ಲೈ ಓವರ್ ಬಳಿ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಆರಿಫ್ ಕೆಳಗೆ ಬೀಳುತ್ತಿದ್ದಂತೆ ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಹತ್ಯೆಗೈದು ಪರಾರಿಯಾಗಿದ್ದರು. ಈ ಪೂರ್ವ ನಿಯೋಜಿತ ಕೃತ್ಯಕ್ಕೆ ಹಳೆ ದ್ವೇಷವೇ ಕಾರಣ ಎಂದು ತಿಳಿದುಬಂದಿದೆ.

ಪೊಲೀಸರ ಕಣ್ಣು ತಪ್ಪಿಸಲು ಆರೋಪಿಗಳು ಹೈಟೆಕ್ ತಂತ್ರಜ್ಞಾನ ಬಳಸಿದ್ದರು ಎಂಬುದು ತನಿಖೆಯಲ್ಲಿ ದೃಢಪಟ್ಟಿದೆ. ದುಬೈನಲ್ಲಿದ್ದ ಅಶ್ವೀರ್ ಎಂಬಾತ ಒಟಿಪಿ (OTP) ಪಡೆದು ಆರೋಪಿಗಳಿಗೆ ಅಂತರರಾಷ್ಟ್ರೀಯ ವಾಟ್ಸಾಪ್ ಸಂಖ್ಯೆಗಳನ್ನು ಸಕ್ರಿಯಗೊಳಿಸಿಕೊಟ್ಟಿದ್ದ. ಪೊಲೀಸರು ಒಂದು ನಂಬರ್ ಪತ್ತೆಹಚ್ಚುವ ಮೊದಲೇ ಮತ್ತೊಂದು ನಂಬರ್ ಬಳಸಿ ಸಂವಹನ ನಡೆಸಲಾಗುತ್ತಿತ್ತು.ವಿದೇಶದಲ್ಲಿರುವ ಮುಸ್ತಫಾ ಮತ್ತು ಅಶ್ವೀರ್ ಆರೋಪಿಗಳಿಗೆ ತಲೆಮರೆಸಿಕೊಳ್ಳಲು ಹಣಕಾಸಿನ ನೆರವು ನೀಡುತ್ತಿದ್ದರು. ಅರ್ಶದ್ ಎಂಬಾತ ಶಸ್ತ್ರಾಸ್ತ್ರ ಒದಗಿಸಿದ್ದಲ್ಲದೆ, ಪೊಲೀಸರ ಚಲನವಲನದ ಮಾಹಿತಿ ನೀಡುತ್ತಿದ್ದ. ಕೊಲೆಗೆ ಬಳಸಲಾದ ಬಾಡಿಗೆ ಕಾರನ್ನು ವ್ಯವಸ್ಥೆ ಮಾಡಿದ್ದ ಸುಹೈಲ್, ಕೃತ್ಯದ ಬೆನ್ನಲ್ಲೇ ಸೌದಿ ಅರೇಬಿಯಾಗೆ ಪರಾರಿಯಾಗಿದ್ದಾನೆ. ಈ ಕೊಲೆ ಪ್ರಕರಣದ ಹಿಂದೆ ದೊಡ್ಡ ಜಾಲವೇ ಕೆಲಸ ಮಾಡಿದೆ. ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳ ಪತ್ತೆಗಾಗಿ ಬಲೆ ಬೀಸಲಾಗಿದ್ದು, ಶೀಘ್ರದಲ್ಲೇ ಅವರನ್ನೂ ಬಂಧಿಸಲಾಗುವುದು,” ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!