ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಕುರ್ಣೇಗಾಲ ಗ್ರಾಮದಲ್ಲಿ ವ್ಯಕ್ತಿಯ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪ್ರಿಯಕರನ ಜೊತೆ ಸೇರಿ ಪತ್ನಿಯೇ ಪತಿಯನ್ನು ಕೊಲೆ ಮಾಡಿರುವುದು ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ.
ಜವರಪ್ಪ ಮೃತ ವ್ಯಕ್ತಿಯಾಗಿದ್ದು, ಪ್ರಕರಣ ಸಂಬಂಧ ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ ಸಿದ್ದೇಶ್ (32) ಹಾಗೂ ಕುರ್ಣೇಗಾಲ ಗ್ರಾಮದ ಅಮೃತಾ (26)ರನ್ನು ಪೊಲೀಸರು ಬಂಧಿಸಿದ್ದಾರೆ.
ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆ ಎಂಬ ಕಾರಣಕ್ಕೆ ಈ ಕೊಲೆ ನಡೆದಿದೆ ಎಂದು ತಿಳಿದುಬಂದಿದೆ.
ಕೆಲ ದಿನಗಳ ಹಿಂದೆ ಜವರಪ್ಪ ಶವ ರಸ್ತೆಬದಿಯಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿತ್ತು. ಈ ಕುರಿತು ಮೃತನ ಸಹೋದರ ರವಿ ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ಆರಂಭಿಸಿದ್ದರು.
ತನಿಖೆಯಲ್ಲಿ, ಅಮೃತಾ ಮತ್ತು ಸಿದ್ದೇಶ್ ನಡುವೆ ಅಕ್ರಮ ಸಂಬಂಧ ಇದ್ದದ್ದು ಬೆಳಕಿಗೆ ಬಂದಿದೆ. ಈ ಸಂಬಂಧಕ್ಕೆ ಜವರಪ್ಪ ಅಡ್ಡಿಯಾಗುತ್ತಿದ್ದ ಹಿನ್ನೆಲೆಯಲ್ಲಿ ಇಬ್ಬರೂ ಸೇರಿ ಕೊಲೆ ಸಂಚು ರೂಪಿಸಿ, ಜವರಪ್ಪನನ್ನು ಹತ್ಯೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ ಮಾರ್ಗದರ್ಶನದಲ್ಲಿ ಮೂರು ವಿಶೇಷ ತಂಡಗಳನ್ನು ರಚಿಸಿ ತನಿಖೆ ನಡೆಸಲಾಗಿತ್ತು. ಸದ್ಯ ಆರೋಪಿಗಳನ್ನು ಬಂಧಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ.














