ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಳದ ಸಮೀಪ ಮುಖ್ಯ ರಸ್ತೆಯ ಮೂಲಕ ಬಲ್ನಾಡು ದಂಡನಾಯಕ ಉಳ್ಳಾಲ್ತಿ ಭಂಡಾರ ಪ್ರವೇಶಿಸುವ ದಾರಿಯಲ್ಲಿದ್ದ ಹಳೆಯ ಕಟ್ಟಡವನ್ನು ಭಕ್ತರು ತೆರವುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಶಾಸಕ ಅಶೋಕ್ ರೈ ಹಾಗೂ ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ವಿರುದ್ಧ ಪುತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ, ಅದನ್ನು ರದ್ದುಪಡಿಸುವಂತೆ ಭಕ್ತರು ಆಗ್ರಹಿಸಿದ್ದಾರೆ.
ಈ ಕುರಿತು ಭಕ್ತರು ಪುತ್ತೂರು ನಗರ ಪೊಲೀಸ್ ಠಾಣೆ ಮುಂಭಾಗದಲ್ಲಿ ಜಮಾಯಿಸಿ ಮನವಿ ಸಲ್ಲಿಸಿದರು. ಕಟ್ಟಡ ತೆರವುಗೊಳಿಸಿದ ಕ್ರಮವು ಭಕ್ತರ ಹಿತದೃಷ್ಟಿಯಿಂದ ಕೈಗೊಳ್ಳಲಾಗಿದ್ದು, ಸಾರ್ವಜನಿಕ ಸಂಚಾರ ಹಾಗೂ ಧಾರ್ಮಿಕ ಕಾರ್ಯಗಳಿಗೆ ಅಡಚಣೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಅನಿವಾರ್ಯವಾಗಿತ್ತು ಎಂದು ಅವರು ತಿಳಿಸಿದ್ದಾರೆ.
ಇದಲ್ಲದೆ, ಕಟ್ಟಡ ಮಾಲೀಕರ ವಿರುದ್ಧವೇ ಪ್ರಕರಣ ದಾಖಲಿಸಬೇಕು ಎಂದು ಭಕ್ತರು ಒತ್ತಾಯಿಸಿದ್ದಾರೆ. ಪ್ರಕರಣವನ್ನು ತಕ್ಷಣವೇ ಹಿಂಪಡೆಯುವಂತೆ ಮತ್ತು ಸಂಬಂಧಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರನ್ನು ಮನವಿಯಲ್ಲಿ ಕೇಳಲಾಗಿದೆ.














