ಬೆಳ್ತಂಗಡಿ: ಪಟ್ಟಣದ ಕಸಬಾ ಗ್ರಾಮದ ಕೆಇಬಿ ರಸ್ತೆಯಲ್ಲಿರುವ ‘ಪವನ್’ ಹೆಸರಿನ ಕ್ಯಾಂಟಿನ್ನಲ್ಲಿ ಅಕ್ರಮ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಕ್ಯಾಂಟಿನ್ ನಡೆಸುತ್ತಿದ್ದ ಸುಂದರ್ ಶೆಟ್ಟಿ ಹಾಗೂ ಅವರ ಪರಿಚಯದ ಉಸ್ಮಾನ್ ಎಂಬವರು ಅಕ್ರಮ ಲಾಭ ಪಡೆಯುವ ಉದ್ದೇಶದಿಂದ ಕ್ಯಾಂಟಿನ್ನ ಒಳ ಕೋಣೆಯಲ್ಲಿ ಮಹಿಳೆಯರನ್ನು ಕರೆಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂದು ಆರೋಪಿಸಲಾಗಿದೆ.
ಈ ಕುರಿತು ಮಾಹಿತಿ ಪಡೆದ ಬೆಳ್ತಂಗಡಿ ಪೊಲೀಸ್ ಠಾಣೆಯ ತನಿಖಾ ವಿಭಾಗದ ಪೊಲೀಸ್ ಉಪನಿರೀಕ್ಷಕ ಸಿಕಂದರ್ ಪಾಷಾ ಅವರು ಗುಪ್ತ ಪರಿಶೀಲನೆ ನಡೆಸಿದಾಗ ಆರೋಪಿತ ಚಟುವಟಿಕೆ ನಡೆಯುತ್ತಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಮೇ 10ರ ಸಂಜೆ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ ಬಿ.ಎಸ್ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ದಾಳಿ ನಡೆಸಿದರು.
ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರಮ ವೇಶ್ಯಾವಾಟಿಕೆ ತಡೆ ಕಾಯ್ದೆಯ ಕಲಂ 3, 4, 5 ಹಾಗೂ ಬಿ.ಎನ್.ಎಸ್ನ ಕಲಂ 143(2) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.














