ಬೆಂಗಳೂರು: ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಸಾಧ್ಯತೆಗಳ ಕುರಿತು ರಾಜಕೀಯ ವಲಯದಲ್ಲಿ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರ ಹೆಸರು ಪ್ರಮುಖವಾಗಿ ಕೇಳಿಬರುತ್ತಿದೆ.
ಮೂಲಗಳ ಪ್ರಕಾರ, ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಹುದ್ದೆ ವಹಿಸಿಕೊಂಡರೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಲಿದ್ದು, ಆ ಸ್ಥಾನಕ್ಕೆ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಿಸುವ ಕುರಿತು ಕಾಂಗ್ರೆಸ್ ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ ಎನ್ನಲಾಗಿದೆ.
ಇದೇ ವೇಳೆ, ಸಚಿವ ಸ್ಥಾನ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೂ ಸತೀಶ್ ಜಾರಕಿಹೊಳಿ ಬೇಡಿಕೆ ಇಟ್ಟಿದ್ದರು ಎನ್ನಲಾಗಿದ್ದು, ಈ ಬೆಳವಣಿಗೆಯಿಂದಾಗಿ ಅಧ್ಯಕ್ಷ ಸ್ಥಾನ ಅವರ ಕೈತಪ್ಪುವ ಸಾಧ್ಯತೆ ಹೆಚ್ಚಾಗಿದೆ ಎಂದು ಪಕ್ಷದ ವಲಯಗಳಲ್ಲಿ ಚರ್ಚೆ ನಡೆಯುತ್ತಿದೆ.
ಕಾಂಗ್ರೆಸ್ ಹೈಕಮಾಂಡ್ ನಾಯಕರು ಬಿ.ಕೆ. ಹರಿಪ್ರಸಾದ್ ಅವರ ಹೆಸರನ್ನು ಅಂತಿಮಗೊಳಿಸಿದ್ದು, ಈ ಸಂಬಂಧ ಅವರಿಗೆ ದೂರವಾಣಿ ಮೂಲಕ ಮಾಹಿತಿ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ, ಈ ಕುರಿತು ಪಕ್ಷದ ಅಧಿಕೃತ ಪ್ರಕಟಣೆ ಇನ್ನೂ ಹೊರಬಂದಿಲ್ಲ.






