ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಹಾಗೂ ಮಾಜಿ ಸಂಸದೆ ಸುಮಲತಾ ಅವರಿಗೆ ಎನ್ ಡಿಎ ರಾಜ್ಯಸಭೆ ಟಿಕೆಟ್ ನಿರಾಕರಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಮಾತನಾಡಿದ ವಿಜಯೇಂದ್ರ, ದೇವೇಗೌಡರು ನರೇಂದ್ರ ಮೋದಿಯವರ ಕೈ ಬಲಪಡಿಸಬೇಕು, ಎನ್ ಡಿಎಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದಾರೆ.
ಅವರ ಬಗ್ಗೆ ನಮಗೆಲ್ಲರಿಗೂ ಅಪಾರವಾದ ಗೌರವವಿದೆ. ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ನೀಡುವ ಬಗ್ಗೆ ರಾಜ್ಯದಲ್ಲಿ ಯಾವುದೇ ಚರ್ಚೆ ನಡೆದಿರಲಿಲ್ಲ. ಇಷ್ಟು ಮಾತ್ರ ನಾನು ಹೇಳಬಲ್ಲೆ ಎಂದರು.
ಸುಮಲತಾ ಅವರ ಬಗ್ಗೆ ನಾವು ಕೂಡ ಅವರ ಹೆಸರನ್ನು ಪ್ರಸ್ತಾಪಿಸಿದ್ದೆವು. ಪಕ್ಷದ ವರಿಷ್ಠರು ಇಂದಿನ ರಾಜಕೀಯ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಯಾರಿಗೆ ಅವಕಾಶ ಮಾಡಿಕೊಡಬೇಕು ಎಂಬುದನ್ನು ತೀರ್ಮಾನ ಮಾಡಿದ್ದಾರೆ. ಒಟ್ಟಾರೆಯಾಗಿ ಹೇಲಬೇಕೆಂದರೆ ಪ್ರಾಮಾಣಿಕವಾಗಿ ದುಡಿದಿರುವ ಸಾಮಾನ್ಯ ಕಾರ್ಯಕರ್ತರಿಗೆ ಬಿಜೆಪಿ ಅವಕಾಶ ಮಾಡಿಕೊಟ್ಟಿದೆ ಎಂದರು.
ಸುಮಲತಾ ಅವರ ಬಗ್ಗೆ ಬಿಜೆಪಿಯವರಿಗೆ ಅಪಾರ ಅಭಿಮಾನವಿದೆ. ಈ ಹಿಂದೆ ಸುಮಲತಾ ಅವರು ಮಂಡ್ಯ ಲೋಕಸಭಾ ಚುನಾವಣೆಗೆ ನಿಂತಾಗ ಬಿಜೆಪೊ ಸುಮಲತಾವರಿಗೆ ಬೆಂಬಲ ನೀಡಿತ್ತು. ನಮ್ಮ ಬೆಂಬಲದಿಂದ ಅವರು ಉತ್ತಮ ಅಂತರದಿಂದ ಗೆದ್ದಿದ್ದರು. ಕುಮಾರಸ್ವಾಮಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುತ್ತಿದ್ದಂತೆ ಸುಮಲತಾ ಅವರು ಮಂಡ್ಯ ಸ್ಥಾನವನ್ನು ಬಿಜೆಪಿಗೆ ಬಿಟ್ಟುಕೊಟ್ಟಿದ್ದಾರೆ. ಅದರ ಬಗ್ಗೆ ಪ್ರಶ್ನೆ ಇಲ್ಲ. ಇಲ್ಲಿಗೆ ಎಲ್ಲವೂ ಮುಗಿದಿಲ್ಲ. ಮುಂದಿನ ದಿನಗಳಲ್ಲಿ ಸುಮಲತಾ ಅವರಿಗೆ ಪಕ್ಷದ ವರಿಷ್ಠರು ಸೂಕ್ತ ಸ್ಥಾನಮಾನ ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.







