ಮಂಗಳೂರು, ಜೂನ್ 8: ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಬಿಲ್ಲವ, ಶೆಟ್ಟಿ ಹಾಗೂ ಬಂಟ್ಸ್ ಸಮುದಾಯಗಳ ಬಗ್ಗೆ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಹೇಳಿಕೆಗಳನ್ನು ಒಳಗೊಂಡ ವಿಡಿಯೋ ಮತ್ತು ಪೋಸ್ಟ್ ಪ್ರಕಟಿಸಿರುವ ಆರೋಪದ ಕುರಿತು ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಿರುವೆರ್ ಕುಡ್ಲ (ರಿ) ಮಂಗಳೂರು ಘಟಕದ ಅಧ್ಯಕ್ಷ ರಾಕೇಶ್ (38) ಅವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.
ದೂರಿನ ಪ್ರಕಾರ, “Anitha Kasargod” ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಪ್ರಕಟಗೊಂಡಿರುವ ವಿಡಿಯೋದಲ್ಲಿ ಕೆಲ ಸಮುದಾಯಗಳ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಲಾಗಿದ್ದು, ಧರ್ಮ ಮತ್ತು ಜಾತಿಗಳ ನಡುವೆ ದ್ವೇಷ ಹಾಗೂ ವೈಮನಸ್ಸು ಉಂಟುಮಾಡುವ ರೀತಿಯ ಹೇಳಿಕೆಗಳನ್ನು ನೀಡಲಾಗಿದೆ ಎಂದು ಆರೋಪಿಸಲಾಗಿದೆ.
ಇಂತಹ ಪೋಸ್ಟ್ ಮತ್ತು ವಿಡಿಯೋಗಳು ಸಮಾಜದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಉಂಟುಮಾಡುವ ಸಾಧ್ಯತೆ ಇರುವುದರಿಂದ, ಸಂಬಂಧಪಟ್ಟ ಖಾತೆದಾರರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.
ಈ ಸಂಬಂಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS)ಯ ಸಂಬಂಧಿತ ಕಲಂಗಳಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.







