ಬೆಂಗಳೂರು: ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಚುರುಕುಗೊಳಿಸುವ ಉದ್ದೇಶದಿಂದ ಮುಖ್ಯಮಂತ್ರಿ ಅವರು ರಾಜ್ಯದ ತಾಲೂಕು ಮತ್ತು ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ.
ಸಾರ್ವಜನಿಕರ ಕೆಲಸ ಕಾರ್ಯಗಳಲ್ಲಿ ನಿರ್ಲಕ್ಷ್ಯ ತೋರಿಸುವುದನ್ನು ಸಹಿಸಲಾಗುವುದಿಲ್ಲ ಎಂದು ಎಚ್ಚರಿಸಿರುವ ಅವರು, ಕಚೇರಿ ಹಾಜರಾತಿ ಹಾಗೂ ಜನಸೇವೆಗೆ ಹೆಚ್ಚಿನ ಆದ್ಯತೆ ನೀಡುವಂತೆ ನಿರ್ದೇಶಿಸಿದ್ದಾರೆ.
ಸೂಚನೆಗಳ ಪ್ರಕಾರ, ತಾಲೂಕು ಮತ್ತು ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಪ್ರತಿದಿನ ಬೆಳಿಗ್ಗೆ 10 ಗಂಟೆಯೊಳಗೆ ಕಚೇರಿಯಲ್ಲಿ ಹಾಜರಿರಬೇಕು. ಕಚೇರಿಗೆ ಬಂದ ತಕ್ಷಣ ತಮ್ಮ ಹಾಜರಾತಿಯನ್ನು ದೃಢೀಕರಿಸಲು ಮೊಬೈಲ್ ಸಂದೇಶದ ಮೂಲಕ ಮೇಲಧಿಕಾರಿಗಳಿಗೆ ಮಾಹಿತಿ ನೀಡುವುದು ಕಡ್ಡಾಯ ಎಂದು ತಿಳಿಸಿದ್ದಾರೆ.
ಸರ್ಕಾರದ ಮೇಲೆ ಜನರು ಅಪಾರ ನಂಬಿಕೆ ಇಟ್ಟಿದ್ದು, ವಿವಿಧ ಕೆಲಸಗಳಿಗಾಗಿ ಕಚೇರಿಗಳಿಗೆ ಬರುವ ಸಾರ್ವಜನಿಕರನ್ನು ಅನಗತ್ಯವಾಗಿ ಅಲೆದಾಡಿಸುವುದು ಅಥವಾ ಅವರ ಅರ್ಜಿಗಳಿಗೆ ಸ್ಪಂದಿಸದೆ ವಿಳಂಬ ಮಾಡುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಸೇವೆಗಳನ್ನು ಸಮಯಕ್ಕೆ ಸರಿಯಾಗಿ ಒದಗಿಸುವ ಮೂಲಕ ಆಡಳಿತದ ಮೇಲಿನ ಜನರ ವಿಶ್ವಾಸವನ್ನು ಉಳಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ. ಕಚೇರಿ ಹಾಜರಾತಿ ಮತ್ತು ಕಾರ್ಯನಿರ್ವಹಣೆಯ ಮೇಲೆ ನಿಗಾ ವಹಿಸಲು ಡಿಜಿಟಲ್ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುವುದು ಎಂದು ತಿಳಿದುಬಂದಿದೆ.







