ಪುತ್ತೂರು, ಜೂ. 20: ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ–ಬಿಲ್ಲೆ ರಸ್ತೆಯ ಡಿಪ್ಪೋ ಸಮೀಪ ಅಕ್ರಮವಾಗಿ ಗೋ ಸಾಗಾಟ ನಡೆಸಿದ ಆರೋಪದಡಿ ಬಂಧಿತರಾಗಿದ್ದ ಇಬ್ಬರು ಆರೋಪಿಗಳಿಗೆ ಪುತ್ತೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಹಾಸನ ಜಿಲ್ಲೆಯ ಅರಕಲಗೂಡು ನಿವಾಸಿಗಳಾದ ವಾಹನ ಚಾಲಕ ಚಂದ್ರು @ ಚಂದ್ರಶೇಖರ ಹಾಗೂ ಕ್ಲೀನರ್ ಮೋಹನ ಅವರನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದರು.
ಆರೋಪಿಗಳು ಯಾವುದೇ ಪರವಾನಗಿ ಇಲ್ಲದೆ ಎರಡು ಜಾನುವಾರುಗಳನ್ನು ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದು, ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದರು ಎಂದು ಆರೋಪಿಸಲಾಗಿತ್ತು. ಈ ವೇಳೆ ವಾಹನ ಆಯತಪ್ಪಿ ಬಿದ್ದಿದ್ದು, ಜಾನುವಾರುಗಳನ್ನು ವಾಹನದಿಂದ ಇಳಿಸಿ ಓಡಿಸಲು ಯತ್ನಿಸಿದ್ದರೆಂದು ಪೊಲೀಸರು ಪ್ರಕರಣ ದಾಖಲಿಸಿದ್ದರು. ಬಳಿಕ ಘಟನಾ ಸ್ಥಳದ ಸಮೀಪ ಎರಡು ಜಾನುವಾರುಗಳನ್ನು ಪತ್ತೆಹಚ್ಚಿ, ಸಾಗಾಟಕ್ಕೆ ಬಳಸಿದ ವಾಹನ ಹಾಗೂ ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿತ್ತು.
ಬಂಧಿತ ಆರೋಪಿಗಳ ಪರವಾಗಿ ವಕೀಲರಾದ ರಮೀಜ್ ಕಾರ್ವೆಲ್ ಹಾಗೂ ಅಶ್ರಫ್ ಕನ್ಯಾರಕೋಡಿ ವಾದ ಮಂಡಿಸಿದ್ದರು.







