ಬಿಡದಿ ಟೌನ್ ಶಿಪ್ ಬಗ್ಗೆ ನೇರಾನೇರ ಚರ್ಚೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಪಂಥಾಹ್ವಾನ ಸ್ವೀಕರಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಟೈಮ್ ಫಿಕ್ಸ್ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಹೆಚ್.ಡಿ. ಕುಮಾರಸ್ವಾಮಿ ರೈತರ ಸಮ್ಮುಖದಲ್ಲೇ ಚರ್ಚೆಗೆ ಕರೆದಿದ್ದಾರೆ.
ಜೂನ್ 26ರಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧಕ್ಕೆ ಬರಲು ಸಿಎಂ ಆಹ್ವಾನ ನೀಡಿದ್ದಾರೆ. ಬಿಡದಿ ಟೌನ್ ಶಿಪ್ ಗೆ ಸಂಬಂಧಿಸಿದ ಅಧಿಕೃತ ದಾಖಲೆಗಳ ಜೊತೆಗೆ ಜೂನ್ 26ರಂದು ಬೆಳಿಗ್ಗೆ 11 ಗಂಟೆಗೆ ಐವರು ಜನಪ್ರತಿನಿಧಿಗಳ ಜೊತೆಗೆ ಬರುವಂತೆ ಕುಮಾರಸ್ವಾಮಿಗೆ ಸಿಎಂ ಡಿಕೆ ಆಹ್ವಾನ ನೀಡಿ ಪತ್ರ ಬರೆದಿದ್ದಾರೆ.
ಇದಕ್ಕೆ ಹೆಚ್.ಡಿ. ಕುಮಾರಸ್ವಾಮಿ ಪತ್ರ ಬರೆದು ಜೂ. 27ರಂದು ಬಾಧಿತ ರೈತರ ಸಮ್ಮುಖದಲ್ಲೇ ಚರ್ಚೆ ನಡೆಸೋಣ ಎಂದು ತಿಳಿಸಿದ್ದಾರೆ.
ಹೀಗಿದೆ ಕುಮಾರಸ್ವಾಮಿ ಪತ್ರ:
ದಿನಾಂಕ: 22-06-2026ರ ತಮ್ಮ ಪತ್ರದಲ್ಲಿ ವಿಧಾನಸೌಧದಲ್ಲಿ ದಿನಾಂಕ: 26-06-2026ರಂದು ಬೆಳಿಗ್ಗೆ 11 ಗಂಟೆಗೆ ಬಿಡದಿ ಟೌನ್ಶಿಪ್ ಯೋಜನೆಗೆ ಸಂಬಂಧಿಸಿದ ಸಭೆಗೆ ನನ್ನನು ಮತ್ತು ನನ್ನ ತಂಡದ ಐವರು ಪ್ರತಿ ನಿಧಿಗಳೊಂದಿಗೆ ಚರ್ಚೆಗೆ ಆಹ್ವಾನಿಸಿರುವ ಪತ್ರ ನನ್ನ ಕೈಸೇರಿದೆ. ತಮ್ಮ ಆಹ್ವಾನಕ್ಕೆ ಧನ್ಯವಾದಗಳು.
ಬಿಡದಿ ಸಮಗ್ರ ಉಪ ನಗರ ಯೋಜನೆ ಅನುಷ್ಠಾನದಿಂದ ರಾಮನಗರ ತಾಲ್ಲೂಕಿನ ಬಿಡದಿ ಹೋಬಳಿಯ ಎಂಟು ಗ್ರಾಮಗಳು ಮತ್ತು ಹಾರೋಹಳ್ಳಿ ತಾಲ್ಲೂಕಿನ ಒಂದು ಗ್ರಾಮದ ರೈತರು, ಗ್ರಾಮಸ್ಥರು ಮತ್ತು ಪಾಲುದಾರರು ಹಲವಾರು ಸಮಸ್ಯೆ ಮತ್ತು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಅಲ್ಲದೇ, ಈ ಭಾಗದಲ್ಲಿರುವ ಅಪಾರ ಪರಿಸರ ಸಂಪತ್ತಿಗೆ ಹಾನಿಯಾಗುತ್ತದೆ.
ಈ ಹಿನ್ನೆಲೆಯಲ್ಲಿ ತಾವು ಪ್ರಸ್ತಾಪಿಸಿರುವ ಸಭೆಯನ್ನು ರಾಮನಗರ ಜಿಲ್ಲೆಯ ಬಿಡದಿ ಅಥವ ಭಾದಿತ ಪ್ರದೇಶವಾದ ಭೈರಮಂಗಲದ ಯಾವುದಾದರು ಸೂಕ್ತ ಸಾರ್ವಜನಿಕ ಸ್ಥಳದಲ್ಲಿ ಸಭೆ ಕರೆಯುವುದು ಸಮಂಜನವೆನಿಸುತ್ತದೆ.
ಈ ಮೇಲೆ ಸೂಚಿಸಿದ ಸ್ಥಳಗಳಲ್ಲಿ ಬಿಡದಿ ಸಮಗ್ರ ಉಪನಗರ ಯೋಜನೆಯಿಂದ ಭಾದಿತರಾಗಿರುವ ರೈತರು, ಗ್ರಾಮಸ್ಥರು, ಕೃಷಿ ಕಾರ್ಮಿಕರು. ಹೈ ನುಗಾರಿಕೆ ಉಧ್ಯಮದಲ್ಲಿರುವ ರೈತ ಮಹಿಳೆಯರು, ಸಣ್ಣ ವ್ಯಾಪರಸ್ಥರು, ಉಧ್ಯಮಿಗಳು ಹಾಗೂ ಭಾದಿತ ಇತರ ಪಾಲುದಾರರನ್ನು ಭಾಗವಹಿಸಲು ಅವಕಾಶ ನೀಡಿದಲ್ಲಿ ಈ ಸಭೆಯಲ್ಲಿ ಮುಕ್ತ ಮನಸ್ಸಿನ ಚರ್ಚೆ ನಡೆಸಿ, ಭಾದಿತ ವರ್ಗದ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅವಕಾಶವಾಗುತ್ತದೆ ಎನ್ನುವುದು ನನ್ನ ಸ್ಪಷ್ಟ ಅಭಿಪ್ರಾಯ ಮತ್ತು ನಿಲುವು.
ಈ ಯೋಜನೆಯ ರಚನೆ ಮತ್ತು ಅನುಷ್ಠಾನದಲ್ಲಿ ನನಗೆ ಯಾವುದೇ ವೈಯಕ್ತಿಕ ಹಿತಾಸಕ್ತಿ ಇಲ್ಲ ಎನ್ನುವುದನ್ನು ಈ ಪತ್ರದ ಮೂಲಕ ಸ್ಪಷ್ಟ ಪಡಿಸುತ್ತಿದ್ದೇನೆ.
ಮುಂದುವರೆದು, ವಿಧಾನಸೌಧದಲ್ಲಿ ನಡೆಸಲು ಉದ್ದೇಶಿಸಿರುವ ಸಭೆಯಲ್ಲಿ ಭಾದಿತ ರೈತ ವರ್ಗ, ಗ್ರಾಮಸ್ಥರು ಮತ್ತು ಪಾಲುದಾರರನ್ನು ಆಹ್ವಾನಿಸದೆ ಅವರನ್ನು ಹೊರಗೆ ಇಟ್ಟು ಸಭೆ ನಡೆಸುವುದರಿಂದ ಸಭೆ ಫಲಪ್ರದವಾಗುವುದಿಲ್ಲ.
ತಾವು ನಿಗದಿಪಡಿಸಿದ ದಿನಾಂಕ:26-06-2026 ರಂದು ನನಗೆ ಪೂರ್ವ ನಿಯೋಜಿತ ಕಾರ್ಯಕ್ರಮಗಳು ಇರುವುದರಿಂದ, ಈ ಉದ್ದೇಶಿತ ಸಭೆಯನ್ನು ದಿನಾಂಕ:27-06-2026 ರಂದು ಮೇಲೆ ತಿಳಿಸಿದಂತೆ ಬಿಡದಿ ಅಥವಾ ಭೈರಮಂಗಲದ ಸೂಕ್ತ ಸ್ಥಳದಲ್ಲಿ ಆಯೋಜಿಸಿ ಮೇಲೆ ಕಾಣಿಸಿದ ಭಾದಿತ ವರ್ಗದ ಜನರನ್ನು ಆಹ್ವಾನಿಸಿ ಸಭೆ ನಡೆಸಬೇಕೆಂದು ಈ ಮೂಲಕ ಕೋರುತ್ತೇನೆ ಎಂದು ಹೆಚ್.ಡಿ.ಕೆ. ತಿಳಿಸಿದ್ದಾರೆ







