ಪುತ್ತೂರು: ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಒಳರೋಗಿಯ ಆರೋಗ್ಯ ಸ್ಥಿತಿ ಗಂಭೀರಗೊಂಡ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲು ವೈದ್ಯರು ಸೂಚಿಸಿದ ವೇಳೆ, ರೋಗಿಯ ಪುತ್ರ ವೈದ್ಯಾಧಿಕಾರಿಯೊಂದಿಗೆ ವಾಗ್ವಾದ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಕೇಳಿಬಂದಿದೆ.ಪೊಲೀಸರ ಮಾಹಿತಿ ಪ್ರಕಾರ, ಪುತ್ತೂರು ಕೊಡಿಂಬಾಳ ನಿವಾಸಿ ಶಾಂತರಾಮ ಗೌಡ ಅವರು ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದರು. ಜೂನ್ 25ರ ರಾತ್ರಿ ಅವರ ಆರೋಗ್ಯ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯಾಧಿಕಾರಿಗಳು ಶಾಂತರಾಮ ಗೌಡ ಅವರ ಪುತ್ರ ಗೋವರ್ಧನ ಗೌಡ ಅವರಿಗೆ ಸೂಚಿಸಿದ್ದರು. ಈ ವೇಳೆ ಗೋವರ್ಧನ ಗೌಡ ಅವರು ವೈದ್ಯಾಧಿಕಾರಿಯೊಂದಿಗೆ ಗಲಾಟೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ವೈದ್ಯಾಧಿಕಾರಿ ನೀಡಿದ ದೂರಿನಲ್ಲಿ ಆರೋಪಿಸಲಾಗಿದೆ.ಈ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 72/2026ರಡಿ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 352, 132 ಹಾಗೂ *ಕರ್ನಾಟಕ ವೈದ್ಯಕೀಯ ಸೇವಾ ಸಿಬ್ಬಂದಿ ಮೇಲಿನ ಹಿಂಸಾಚಾರ ಮತ್ತು ವೈದ್ಯಕೀಯ ಸಂಸ್ಥೆಗಳ ಆಸ್ತಿಪಾಸ್ತಿಗೆ ಹಾನಿ ತಡೆ ಕಾಯ್ದೆ–2009 (ತಿದ್ದುಪಡಿ–2024)*ರ ಕಲಂ 3, 3(ಎ) ಮತ್ತು 4ರಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.







