ಬೆಂಗಳೂರು : ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌‍ಪಿ) ಅಳವಡಿಕೆಗೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ಬುಧವಾರ (ಸೆಪ್ಟೆಂಬರ್‌ 18) ವಿಚಾರಣೆ ನಡೆಯಲಿದ್ದು, ಅಲ್ಲಿಯವರೆಗೆ ದಂಡ ವಿಧಿಸದಿರಲು ಸಾರಿಗೆ ಇಲಾಖೆಯು ನಿರ್ಧರಿಸಿದೆ.
ಎಚ್‌ಎಸ್‌ಆರ್‌‍ಪಿ ಅಳವಡಿಸಲು ಕಾಲಾವಕಾಶ ವಿಸ್ತರಿಸಬೇಕು ಎಂದು ಕೋರಿ ಬಿಎನ್‌ಡಿ ಎನರ್ಜಿ ಪ್ರೈವೇಟ್‌ ಲಿಮಿಟೆಡ್ ಕಂಪನಿಯು ಜೂನ್‌ನಲ್ಲಿ ಹೈಕೋರ್ಟ್‌ ಮೆಟ್ಟಿಲೇರಿತ್ತು.
ಅವಧಿ ವಿಸ್ತರಿಸಲು ಸೂಚಿಸಿದ್ದ ಹೈಕೋರ್ಟ್‌ ವಿಚಾರಣೆಯನ್ನು ಮುಂದೂಡಿತ್ತು. ಅದರಂತೆ ಸೆ.15ರವರೆಗೆ ಅವಧಿ ವಿಸ್ತರಿಸಲಾಗಿತ್ತು.

‘ಈಗ ಮೂರು ತಿಂಗಳ ಗಡುವು ಮುಗಿದಿದೆ. ಸೆ.18ಕ್ಕೆ ಹೈಕೋರ್ಟ್ ನೀಡುವ ಆದೇಶವನ್ನು ಆಧರಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು. ಅಲ್ಲಿಯವರೆಗೆ ಬಲವಂತದ ಕ್ರಮ ಇರುವುದಿಲ್ಲ’ ಎಂದು ಸಾರಿಗೆ ಸಚಿವ ರಾಮಲಿಂಗಾರಡ್ಡಿ ಸ್ಪಷ್ಟಪಡಿಸಿದ್ದಾರೆ.

ತಪಾಸಣೆ ಮಾಡಿದರೆ ಹೆಚ್ಚಳ ಸಾಧ್ಯತೆ: 2019ರ ಏಪ್ರಿಲ್‌ 1ರ ನಂತರದ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಇದೆ. ಅದಕ್ಕಿಂತ ಹಿಂದಿನ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸಬೇಕು. ಇಲ್ಲಿವರೆಗೆ ರಾಜ್ಯದಲ್ಲಿ 52 ಲಕ್ಷ ವಾಹನಗಳಿಗೆ ಅಳವಡಿಸಲಾಗಿದೆ. 1.48 ಕೋಟಿ ವಾಹನಗಳಿಗೆ ಇನ್ನೂ ಅಳವಡಿಕೆಯಾಗಿಲ್ಲ. ಒಮ್ಮೆ ತಪಾಸಣೆ ಆರಂಭಿಸಿದರೆ ಎಚ್‌ಎಸ್‌ಆರ್‌ಪಿ ಅಳವಡಿಸುವವರ ಪ್ರಮಾಣ ಹೆಚ್ಚಳವಾಗಲಿದೆ ಎಂದು ಸಾರಿಗೆ ಇಲಾಖೆ (ಪ್ರವರ್ತನ) ಹೆಚ್ಚುವರಿ ಆಯುಕ್ತ ಸಿ. ಮಲ್ಲಿಕಾರ್ಜುನ ತಿಳಿಸಿದ್ದಾರೆ.

‘ಬೆಂಗಳೂರು ನಗರಕ್ಕಿಂತಲೂ ಉಳಿದ ಜಿಲ್ಲೆಗಳಲ್ಲಿ ಎಚ್‌ಎಸ್‌ಆರ್‌ಪಿ ಅಳವಡಿಸುವವರ ಪ್ರಮಾಣ ಬಹಳ ಕಡಿಮೆ ಇದೆ. ಹೈಕೋರ್ಟ್‌ನ ಆದೇಶದ ಬಳಿಕ ಸರ್ಕಾರ ಕೈಗೊಳ್ಳುವ ತೀರ್ಮಾನದಂತೆ ನಾವು ಕ್ರಮ ಜರುಗಿಸುತ್ತೇವೆ’ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!