ಪುತ್ತೂರು: ಪುರುಷರಕಟ್ಟೆ ಘಟನೆಯ ಹಿನ್ನೆಲೆಯಲ್ಲಿ ಆತಂಕಕ್ಕೆ ಒಳಗಾಗಿರುವ ಯುವತಿಯ ಮನೆಗೆ ವಿಶ್ವ ಹಿಂದೂ ಪರಿಷತ್ (ವಿಹೆಚ್ಪಿ) ಪ್ರಮುಖರು ಭೇಟಿ ನೀಡಿ, ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿ ಸಾಂತ್ವನ ಹೇಳಿದರು.ಬಳಿಕ ಮಾತನಾಡಿದ ವಿಹೆಚ್ಪಿ ಮುಖಂಡರು, ಸಾರ್ವಜನಿಕವಾಗಿ ಆಯುಧ ಪ್ರದರ್ಶಿಸಿ ಯುವತಿಯರಲ್ಲಿ ಪ್ರಾಣಭಯ ಉಂಟುಮಾಡಿದ ಘಟನೆಗೆ ಸಂಬಂಧಿಸಿದಂತೆ ನಿಷ್ಪಕ್ಷಪಾತ ತನಿಖೆ ನಡೆಯಬೇಕು ಎಂದು ಆಗ್ರಹಿಸಿದರು. ಘಟನೆಯನ್ನು ‘ತಪ್ಪು ಗ್ರಹಿಕೆ’ ಎಂದು ಬಿಂಬಿಸಿ ಆರೋಪಿಗಳನ್ನು ರಕ್ಷಿಸುವ ಪ್ರಯತ್ನಗಳು ನಡೆಯಬಾರದು ಎಂದು ಅವರು ಅಭಿಪ್ರಾಯಪಟ್ಟರು.ಪೊಲೀಸ್ ಇಲಾಖೆ ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ನ್ಯಾಯಯುತ ತನಿಖೆ ನಡೆಸಿ ಸಂತ್ರಸ್ತ ಯುವತಿಗೆ ನ್ಯಾಯ ಒದಗಿಸಬೇಕು. ಅಲ್ಲದೆ, ಯುವತಿ ಮತ್ತು ಆಕೆಯ ಕುಟುಂಬದ ವಿರುದ್ಧ ದಾಖಲಿಸಿರುವ ಪ್ರಕರಣವು ಸುಳ್ಳು ಪ್ರಕರಣವಾಗಿದ್ದರೆ ಅದನ್ನು ಹಿಂಪಡೆಯಬೇಕು ಎಂದು ಅವರು ಒತ್ತಾಯಿಸಿದರು.ಭೇಟಿಯ ವೇಳೆ ವಿಹೆಚ್ಪಿ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪವೆಲ್, ಮಂಗಳೂರು ವಿಭಾಗ ಸಹ ಕಾರ್ಯದರ್ಶಿ ಶಿವಾನಂದ ಮೆಂಡನ್, ಪುತ್ತೂರು ಜಿಲ್ಲಾ ಅಧ್ಯಕ್ಷ ಕೃಷ್ಣ ಪ್ರಸನ್ನ, ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ ಹಾಗೂ ಪುತ್ತೂರು ನಗರ ಪ್ರಖಂಡ ಅಧ್ಯಕ್ಷ ದಾಮೋದರ ಪಟಾಲಿ ಉಪಸ್ಥಿತರಿದ್ದರು.







