ಬಂಟ್ವಾಳ: ಬಿ.ಸಿ.ರೋಡು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಜು.16ರಂದು ನಡೆದ ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ನನ್ನು ಚಿಕಿತ್ಸೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ.ಕಕ್ಯಪದವು ನಿವಾಸಿ ಲಾವಣ್ಯ ಅವರನ್ನು ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಚೇತನ್ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಹತ್ಯೆಗೈದ ಆರೋಪದಡಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಘಟನೆಯ ಬಳಿಕ ಕಾರಿನಲ್ಲಿ ಪರಾರಿಯಾಗಿದ್ದ ಆರೋಪಿಯನ್ನು ಮರುದಿನ ಮಂಗಳೂರಿನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದರು. ಈ ವೇಳೆ ಆತ ವಿಷಕಾರಿ ಪದಾರ್ಥ (ಇಲಿಪಾಷಾಣ) ಸೇವಿಸಿದ್ದಾನೆ ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಮೊದಲು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.ವೆನ್ಲಾಕ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದಿದ್ದ ಆರೋಪಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ನಂತರ ಸಾಮಾನ್ಯ ವಾರ್ಡ್ಗೆ ಸ್ಥಳಾಂತರಗೊಂಡಿದ್ದ. ಆರೋಗ್ಯ ಸ್ಥಿರಗೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ಆತನನ್ನು ಬಂಟ್ವಾಳ ನಗರ ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದಾರೆ.ಆರೋಪಿಯನ್ನು ಮಂಗಳವಾರ ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ. ಬಂಟ್ವಾಳ ಉಪ ವಿಭಾಗದ ಎಎಸ್ಪಿ ಯಶ್ ಕುಮಾರ್ ಶರ್ಮ ಅವರ ಮಾರ್ಗದರ್ಶನದಲ್ಲಿ ನಗರ ಠಾಣೆ ಇನ್ಸ್ಪೆಕ್ಟರ್ ಅನಂತಪದ್ಮನಾಭ ನೇತೃತ್ವದಲ್ಲಿ ಪ್ರಕರಣದ ತನಿಖೆ ಮುಂದುವರಿದಿದೆ.









