ಮಂಗಳೂರು: ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಎಕ್ಕಾರು ಬಳಿ ಸೋಮವಾರ ಸಂಜೆ ಖಾಸಗಿ ಸರ್ವಿಸ್ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ಪತ್ನಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಮೃತರನ್ನು ಬಜ್ಪೆ ನಿವಾಸಿ ಬಶೀರ್ ಕಿನ್ನಿಗೋಳಿ (45) ಎಂದು ಗುರುತಿಸಲಾಗಿದೆ.ಬಶೀರ್ ಅವರು ಪತ್ನಿಯೊಂದಿಗೆ ಮುಲ್ಕಿಯ ಕೊಲ್ನಾಡಿನಲ್ಲಿ ನಡೆದ ಸಮಾರಂಭದಲ್ಲಿ ಭಾಗವಹಿಸಿ ಬೈಕ್ನಲ್ಲಿ ಬಜ್ಪೆಗೆ ಹಿಂದಿರುಗುತ್ತಿದ್ದ ವೇಳೆ ಎಕ್ಕಾರು ಸಮೀಪ ಎದುರಿನಿಂದ ಬಂದ ಖಾಸಗಿ ಸರ್ವಿಸ್ ಬಸ್ಗೆ ಡಿಕ್ಕಿ ಹೊಡೆದಿದ್ದಾರೆ ಎಂದು ತಿಳಿದುಬಂದಿದೆ.ಅಪಘಾತದ ತೀವ್ರತೆಗೆ ಬಶೀರ್ ಸ್ಥಳದಲ್ಲೇ ಮೃತಪಟ್ಟರೆ, ಅವರ ಪತ್ನಿ ಗಾಯಗೊಂಡಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಈ ಸಂಬಂಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.









