ಪುತ್ತೂರು, ಜು.31: ಪುತ್ತೂರು ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಉದ್ಯಮಿ ಹಾಗೂ ಯುಆರ್ ಪ್ರಾಪರ್ಟೀಸ್ನ ಮಾಲಕರಾದ ಉಜ್ವಲ್ ಪ್ರಭು ಅವರನ್ನು ನೇಮಕ ಮಾಡಲಾಗಿದೆ.ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಈ ನೇಮಕಾತಿ ಘೋಷಿಸಲಾಯಿತು. ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು ಹಾಗೂ ವ್ಯಾಪಾರಿಗಳ ಸಮಸ್ಯೆಗಳನ್ನು ಪಕ್ಷದ ವೇದಿಕೆಯಲ್ಲಿ ಪರಿಣಾಮಕಾರಿಯಾಗಿ ಪ್ರಸ್ತಾಪಿಸುವ ಉದ್ದೇಶದಿಂದ ಈ ನೇಮಕ ಮಾಡಲಾಗಿದೆ ಎಂದು ಪಕ್ಷದ ಪದಾಧಿಕಾರಿಗಳು ತಿಳಿಸಿದ್ದಾರೆ.ಉಜ್ವಲ್ ಪ್ರಭು ಅವರು ಹಲವು ವರ್ಷಗಳಿಂದ ಬಿಜೆಪಿಯ ವಿವಿಧ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ವ್ಯಾಪಾರ ವಲಯದೊಂದಿಗೆ ಉತ್ತಮ ಸಂಪರ್ಕ ಹೊಂದಿದ್ದಾರೆ. ಅವರ ನೇತೃತ್ವದಲ್ಲಿ ವ್ಯಾಪಾರ ಪ್ರಕೋಷ್ಠವು ಇನ್ನಷ್ಟು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಲಿದೆ ಎಂಬ ವಿಶ್ವಾಸವನ್ನು ಪಕ್ಷದ ಮುಖಂಡರು ವ್ಯಕ್ತಪಡಿಸಿದ್ದಾರೆ.ನೇಮಕಾತಿ ಕುರಿತು ಪ್ರತಿಕ್ರಿಯಿಸಿದ ಉಜ್ವಲ್ ಪ್ರಭು, “ನಾನು ಯಾವುದೇ ಹುದ್ದೆಯ ನಿರೀಕ್ಷೆಯಲ್ಲಿರಲಿಲ್ಲ. ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದೊಂದಿಗೆ ಕೆಲಸ ಮಾಡುತ್ತಿದ್ದೆ. ಪಕ್ಷ ನನ್ನ ಮೇಲೆ ವಿಶ್ವಾಸವಿಟ್ಟು ಈ ಜವಾಬ್ದಾರಿಯನ್ನು ನೀಡಿರುವುದು ಸಂತಸದ ವಿಷಯ. ಈ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿರ್ವಹಿಸುತ್ತೇನೆ. ಪುತ್ತೂರಿನ ವ್ಯಾಪಾರಿಗಳ ಸಮಸ್ಯೆಗಳನ್ನು ಪಕ್ಷದ ವೇದಿಕೆಯಲ್ಲಿ ಪ್ರಸ್ತಾಪಿಸುವುದರ ಜೊತೆಗೆ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ವ್ಯಾಪಾರೋದ್ಯಮ ಸಂಬಂಧಿತ ಯೋಜನೆಗಳನ್ನು ತಳಮಟ್ಟಕ್ಕೆ ತಲುಪಿಸಲು ಶ್ರಮಿಸುತ್ತೇನೆ” ಎಂದು ಹೇಳಿದರು.









