ಮುಂಗಾರು ಹಂಗಾಮು ಮುಗಿಯುತ್ತಾ ಬಂದು, ಇನ್ನೇನು ಮಳೆಯೇ ಮುಗಿಯಿತು ಎನ್ನುವಷ್ಟರಲ್ಲಿ ವರುಣದೇವ ರಾಜ್ಯದಲ್ಲಿ ಮತ್ತೆ (Heavy Rainfall) ರೌದ್ರಾವತಾರ ತಳೆದಿದ್ದಾನೆ. ಕಳೆದ ಎರಡು-ಮೂರು ದಿನಗಳಿಂದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮೇಘಸ್ಫೋಟದ ಮಾದರಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಸಾರ್ವಜನಿಕರ ಬದುಕು ಅಕ್ಷರಶಃ ಹೈರಾಣಾಗಿದೆ.ಬತ್ತಿಹೋಗಿದ್ದ ಹಳ್ಳಕೊಳ್ಳಗಳು ಈಗ ತುಂಬಿ ಹರಿಯುತ್ತಿದ್ದು, ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಭೋರ್ಗರೆಯುತ್ತಿವೆ. ಹವಾಮಾನದ ತೀವ್ರತೆಯನ್ನು ಗಮನಿಸಿ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ ಮೂರು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.ಕೊಡಗು-ಉಡುಪಿಗೆ ಆರೆಂಜ್, ಕರಾವಳಿ-ಮಲೆನಾಡಿಗೆ ರೆಡ್ ಅಲರ್ಟ್!ಮುಂಗಾರು ತೀವ್ರವಾಗಿ ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ರೆಡ್ ಅಲರ್ಟ್’ ಘೋಷಿಸಿದ್ದು, ಅತ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಇನ್ನುಳಿದಂತೆ ಉಡುಪಿ, ಕೊಡಗು ಹಾಗೂ ಹಾಸನ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ನೀಡಲಾಗಿದ್ದರೆ, ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಎಚ್ಚರಿಕೆ ರವಾನಿಸಲಾಗಿದೆ.ಮೀನುಗಾರರಿಗೆ ಕಡಲಿಗೆ ಇಳಿಯದಂತೆ ನಿಷೇಧಉಡುಪಿ ಜಿಲ್ಲೆಯಾದ್ಯಂತ ಶನಿವಾರ ಮುಂಜಾನೆಯಿಂದಲೇ ಬಿಟ್ಟುಬಿಡದೆ ಧೋ ಮಳೆ ಸುರಿಯುತ್ತಿದೆ. ಗಾಳಿಯ ವೇಗ ಗಂಟೆಗೆ 40 ರಿಂದ 55 ಕಿಲೋಮೀಟರ್ ತಲುಪುವ ಸಾಧ್ಯತೆ ಇರುವುದರಿಂದ, ಸಮುದ್ರ ತೀರದ ತಗ್ಗು ಪ್ರದೇಶಗಳ ನಿವಾಸಿಗಳು ಜಾಗರೂಕರಾಗಿರಲು ಸೂಚಿಸಲಾಗಿದೆ. ಭಾನುವಾರವೂ ಜಿಲ್ಲೆಗೆ ಆರೆಂಜ್ ಅಲರ್ಟ್ ಮುಂದುವರಿದಿದ್ದು, ಮುನ್ನೆಚ್ಚರಿಕೆಯಾಗಿ ಮುಂದಿನ ಐದು ದಿನಗಳ ಕಾಲ ಮೀನುಗಾರರು ಯಾವುದೇ ಕಾರಣಕ್ಕೂ ಬೋಟ್‌ಗಳನ್ನು ಸಮುದ್ರಕ್ಕೆ ಇಳಿಸದಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ.ನೇತ್ರಾವತಿ, ಫಲ್ಗುಣಿ ಉಗ್ರರೂಪ: ಸೇತುವೆಗಳು ಜಲಾವೃತದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಹಗಲು-ರಾತ್ರಿ ಎನ್ನದೆ ಸುರಿಯುತ್ತಿರುವ ಅಬ್ಬರದ ಮಳೆಗೆ ಜನಜೀವನ ಸಂಪೂರ್ಣ ಸ್ತಬ್ಧಗೊಂಡಿದೆ. ಫಲ್ಗುಣಿ ಮತ್ತು ನೇತ್ರಾವತಿ ನದಿಗಳು ಉಕ್ಕಿ ಹರಿಯುತ್ತಿದ್ದು, ತೀರ ಪ್ರದೇಶದ ಕೃಷಿ ಭೂಮಿಯನ್ನು ನುಂಗಿ ನೀರು ಹಾಕುತ್ತಿವೆ. ಸವಣಾಲು ಮತ್ತು ಮಲ್ಲರೋಡಿ ಗ್ರಾಮಗಳನ್ನು ಸಂಪರ್ಕಿಸುವ ಪ್ರಮುಖ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಇತ್ತ ಮುಂಡಾಜೆ ಹಾಗೂ ಧರ್ಮಸ್ಥಳ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯ ರಸ್ತೆ ಮಧ್ಯೆ ಭಾರಿ ಗುಡ್ಡ ಕುಸಿತ ಸಂಭವಿಸಿದ್ದು, ಎಲ್ಲೆಂದರಲ್ಲಿ ಮಣ್ಣು ಜರಿದು ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!