ಪುತ್ತೂರು: ದರ್ಬೆಯಲ್ಲಿ ಜೆರಾಕ್ಸ್ ಅಂಗಡಿಯಲ್ಲಿ ನಡೆದ ಪ್ರಮಾದಕ್ಕೆ ಸಂಬಂಧಿಸಿ ಅಂಗಡಿ ಮಾಲಕಿ ಅಂಜನಾ ಪೈ ಅವರ ಮೇಲೆ ನಡೆದ ಗುಂಪು ಹಲ್ಲೆ ಖಂಡನೀಯ ಎಂದು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ನ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಹೇಳಿದರು.ಗುಂಪು ಹಲ್ಲೆಯಿಂದ ಅಂಜನಾ ಪೈ ಅವರ ಕಾಲಿಗೆ ಗಂಭೀರ ಗಾಯವಾಗಿದ್ದು, ಕಾಲು ಮುರಿತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅರುಣ್ ಕುಮಾರ್ ಪುತ್ತಿಲ ಅವರು ರಾತ್ರಿ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿ, ಘಟನೆಯ ಕುರಿತು ಮಾಹಿತಿ ಪಡೆದರು.ಬಳಿಕ ತಡರಾತ್ರಿ ಡಿವೈಎಸ್ಪಿ ಅವರನ್ನು ಭೇಟಿ ಮಾಡಿದ ಅವರು, ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.‘ಕಳೆದ ಕೆಲ ತಿಂಗಳಿನಿಂದ ಪುತ್ತೂರು ಕ್ಷೇತ್ರದಲ್ಲಿ ಇಂತಹ ಘಟನೆಗಳು ಪದೇಪದೇ ನಡೆಯುತ್ತಿವೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು’ ಎಂದು ಅವರು ಒತ್ತಾಯಿಸಿದರು.











