ಮಂಗಳೂರು: ಸುರತ್ಕಲ್ನ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (ಎನ್ಐಟಿ)ಯ ಇಬ್ಬರು ಬೋಧಕ ಸಿಬ್ಬಂದಿ ವಿರುದ್ಧ ಸಾರ್ವಜನಿಕ ಸೇವಕರಿಂದ ನಂಬಿಕೆ ದ್ರೋಹ ಹಾಗೂ ಹಣ ದುರುಪಯೋಗಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಎನ್ಐಟಿ ಅಧಿಕಾರಿಗಳು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದ್ದು, ಸಂಸ್ಥೆಯ ಆಂತರಿಕ ವಿಚಾರಣೆಯಲ್ಲಿ ಹಣದ ದುರುಪಯೋಗ ನಡೆದಿರುವುದು ಪ್ರಾಥಮಿಕವಾಗಿ ಬೆಳಕಿಗೆ ಬಂದಿತ್ತು ಎನ್ನಲಾಗಿದೆ.ಈ ಹಿನ್ನೆಲೆಯಲ್ಲಿ ಎನ್ಐಟಿ ಅಧಿಕಾರಿಗಳು ಕಾನೂನು ಪ್ರಕಾರ ಕ್ರಿಮಿನಲ್ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರು ಬೋಧಕ ಸಿಬ್ಬಂದಿಯನ್ನು ವಶಕ್ಕೆ ಪಡೆದಿದ್ದಾರೆ. ಅವರನ್ನು ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಹಣದ ದುರುಪಯೋಗದ ಸ್ವರೂಪ ಹಾಗೂ ಮೊತ್ತ ಸೇರಿದಂತೆ ಹೆಚ್ಚಿನ ವಿವರಗಳನ್ನು ತನಿಖೆಯ ಬಳಿಕ ಪೊಲೀಸರು ಬಹಿರಂಗಪಡಿಸುವ ಸಾಧ್ಯತೆ ಇದೆ..













