ಉಪ್ಪಿನಂಗಡಿ: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಹಾಗೂ ಪ್ರಭಾರ ಪ್ರಾಚಾರ್ಯ ಇಬ್ರಾಹೀಂ ಎಂ. ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ನೀಡುವ ರಾಜ್ಯ ಮಟ್ಟದ ಅತ್ಯುತ್ತಮ ಉಪನ್ಯಾಸಕ ಹಾಗೂ ಆಡಳಿತ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಸುಮಾರು 20 ವರ್ಷಗಳಿಂದ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಇಬ್ರಾಹೀಂ ಅವರು ವಿದ್ಯಾರ್ಥಿ ಸ್ನೇಹಿ ಮನೋಭಾವ, ಪರಿಣಾಮಕಾರಿ ಬೋಧನಾ ಶೈಲಿ ಹಾಗೂ ಆಡಳಿತಾತ್ಮಕ ದಕ್ಷತೆಯಿಂದ ಗುರುತಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳ ಉನ್ನತ ಶಿಕ್ಷಣ ಮತ್ತು ಉದ್ಯೋಗಾವಕಾಶಗಳಿಗೆ ಮಾರ್ಗದರ್ಶನ ನೀಡಿರುವ ಅವರು, ತಂದೆ-ತಾಯಿ ಇಲ್ಲದ ಮಕ್ಕಳಿಗಾಗಿ ‘ಆಸರೆ ಯೋಜನೆ’ ರೂಪಿಸಿ ಉಚಿತ ಶಿಕ್ಷಣ, ಸಮವಸ್ತ್ರ ಹಾಗೂ ಪುಸ್ತಕ ಒದಗಿಸುವ ಮೂಲಕ ಗಮನ ಸೆಳೆದಿದ್ದಾರೆ.ಅವರ ನೇತೃತ್ವದಲ್ಲಿ ಕಾಲೇಜಿನ ಮೂಲಸೌಕರ್ಯ ಅಭಿವೃದ್ಧಿಗೂ ಒತ್ತು ನೀಡಲಾಗಿದ್ದು, ನೂತನ ಕಟ್ಟಡ, ಕುಡಿಯುವ ನೀರು, ಸಿಸಿಟಿವಿ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳು ನಡೆದಿವೆ.













