ನೆಲ್ಯಾಡಿಯಲ್ಲಿ ಯು-ಟರ್ನ್ಗಾಗಿ ಇಂದು ಪ್ರತಿಭಟನೆ: ರಸ್ತೆ ತಡೆ ಮಾಡಿದರೆ ಕಾನೂನು ಕ್ರಮನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಡಬ ತಾಲೂಕು ನೆಲ್ಯಾಡಿ ಗ್ರಾಮದ ವಿದ್ಯಾನಗರದಲ್ಲಿ ಯು-ಟರ್ನ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ‘ನೆಲ್ಯಾಡಿ ಯು-ಟರ್ನ್’ ಹೋರಾಟ ಸಮಿತಿಯ ವತಿಯಿಂದ ಸೆ.9ರಂದು ಪ್ರತಿಭಟನೆ ನಡೆಯಲಿದೆ.ನೆಲ್ಯಾಡಿ ಗಾಂಧಿ ಮೈದಾನದಲ್ಲಿ ಬೆಳಗ್ಗೆ 9.30ರಿಂದ ಮಧ್ಯಾಹ್ನ 3ರವರೆಗೆ ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಪೊಲೀಸ್ ಇಲಾಖೆಯಿಂದ ಷರತ್ತುಬದ್ಧ ಅನುಮತಿ ನೀಡಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳ ಸುಗಮ ಸಂಚಾರಕ್ಕೆ ಯಾವುದೇ ರೀತಿಯ ಅಡಚಣೆ ಉಂಟು ಮಾಡದಂತೆ ಪ್ರತಿಭಟನೆ ನಡೆಸುವುದಾಗಿ ಸಂಘಟಕರು ಭರವಸೆ ನೀಡಿದ್ದಾರೆ.ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ರಸ್ತೆ ತಡೆ ನಡೆಸಲಾಗುವುದು ಎಂಬ ವದಂತಿಗಳು ಹರಿದಾಡುತ್ತಿವೆ. ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟು ಮಾಡಿದಲ್ಲಿ ಪ್ರತಿಭಟನೆಯ ಸಂಘಟಕರು, ಆಯೋಜಕರು ಹಾಗೂ ಭಾಗವಹಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.













