ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಶೈಕ್ಷಣಿಕ ಪಯಣದಲ್ಲಿ ಐತಿಹಾಸಿಕ ಮೈಲಿಗಲ್ಲು ತಲುಪಿದ್ದು, ಸ್ವಾಯತ್ತ ಸಂಸ್ಥೆಯಾಗಿ ಪ್ರಥಮ ಬಾರಿಗೆ ಪದವೀಧರರ ಸಮಾರಂಭ ಸೆ.11ರಂದು ಕಾಲೇಜಿನ ಸಿಲ್ವರ್ ಜ್ಯುಬಿಲಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಚಾಲಕ ಡಾ. ಜೆ.ಬಿ. ಸಲ್ದಾನ್ಹಾ ತಿಳಿಸಿದ್ದಾರೆ.ಸ್ವಾಯತ್ತ ವ್ಯವಸ್ಥೆಯಡಿ ಸ್ನಾತಕೋತ್ತರ ಪದವಿ ಪಡೆಯುತ್ತಿರುವ ಪ್ರಥಮ ಬ್ಯಾಚ್ನ ವಿದ್ಯಾರ್ಥಿಗಳನ್ನು ಅಧಿಕೃತವಾಗಿ ಗೌರವಿಸುವ ಈ ಸಮಾರಂಭವು ಕಾಲೇಜಿನ ಶೈಕ್ಷಣಿಕ ಪಯಣದಲ್ಲಿ ಮಹತ್ವದ ಹೆಜ್ಜೆಯಾಗಿದೆ. ಶೈಕ್ಷಣಿಕ ಶ್ರೇಷ್ಠತೆ, ವ್ಯಕ್ತಿತ್ವ ನಿರ್ಮಾಣ ಹಾಗೂ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಯ ಬದ್ಧತೆಯನ್ನು ಮತ್ತಷ್ಟು ಬಲಪಡಿಸುವ ಸಂದರ್ಭವೂ ಇದಾಗಿದೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.60 ಮಂದಿಗೆ ಪದವಿ, 5 ಮಂದಿಗೆ ರ್ಯಾಂಕ್ಸ್ವಾಯತ್ತ ಸಂಸ್ಥೆಯಾದ ಬಳಿಕ ಸ್ನಾತಕೋತ್ತರ ಪದವಿಯ ಪ್ರಥಮ ಬ್ಯಾಚ್ನ 60 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತಿದ್ದು, ಐದು ವಿದ್ಯಾರ್ಥಿಗಳಿಗೆ ರ್ಯಾಂಕ್ ಗೌರವ ನೀಡಲಾಗುವುದು.ಪ್ರಸ್ತುತ ಸಂತ ಫಿಲೋಮಿನಾ ಪದವಿ ಕಾಲೇಜಿನಲ್ಲಿ 1,580 ಹಾಗೂ ಸ್ನಾತಕೋತ್ತರ ವಿಭಾಗದಲ್ಲಿ 153 ಸೇರಿದಂತೆ ಒಟ್ಟು 1,703 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.ಗಣ್ಯರ ಉಪಸ್ಥಿತಿಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಹಾಗೂ ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಶನ್, ಮಂಗಳೂರು ಅಧ್ಯಕ್ಷ ಡಾ. ಪೀಟರ್ ಪಾಲ್ ಸಲ್ದಾನ್ಹಾ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.ಕರ್ನಾಟಕ ಸರ್ಕಾರದ ಕಾಲೇಜು ಶಿಕ್ಷಣ ಇಲಾಖೆಯ ಮಂಗಳೂರು ವಿಭಾಗದ ಜಂಟಿ ನಿರ್ದೇಶಕಿ ಪ್ರೊ. ಕವಿತಾ ಕೆ.ಆರ್., ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಶನ್ ಕಾರ್ಯದರ್ಶಿ ಡಾ. ಪ್ರವೀಣ್ ಲಿಯೋ ಲಸ್ರಾದೊ ಹಾಗೂ ಕಾಲೇಜಿನ ಸಂಚಾಲಕ ಡಾ. ಜೆ.ಬಿ. ಸಲ್ದಾನ್ಹಾ ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.ಸಮಾರಂಭದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗಳನ್ನು ಗುರುತಿಸಿ ಗೌರವಿಸುವುದರ ಜತೆಗೆ, ಅವರ ಶೈಕ್ಷಣಿಕ ಪಯಣದಲ್ಲಿ ಪೋಷಕರು, ಶಿಕ್ಷಕರು ಹಾಗೂ ಕಾಲೇಜು ಸಮುದಾಯ ನೀಡಿದ ಸಹಕಾರವನ್ನು ಸ್ಮರಿಸಲಾಗುವುದು. ಶೈಕ್ಷಣಿಕ ಮೆರವಣಿಗೆ, ಅಧಿಕೃತ ಉಡುಪು, ಆಸನ ವ್ಯವಸ್ಥೆ, ರ್ಯಾಂಕ್ ಪಡೆದ ವಿದ್ಯಾರ್ಥಿಗಳ ಗೌರವ ಹಾಗೂ ಪದವಿ ಪ್ರಮಾಣಪತ್ರ ವಿತರಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.ಪತ್ರಿಕಾಗೋಷ್ಠಿಯಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಆಂಟನಿ ಪ್ರಕಾಶ್ ಮೊಂತೆರೊ, ಉಪಪ್ರಾಂಶುಪಾಲ ಡಾ. ವಿಜಯಕುಮಾರ್ ಮೊಳೆಯಾರ್, ಮೌಲ್ಯಮಾಪನ ವಿಭಾಗದ ರಿಜಿಸ್ಟ್ರಾರ್ ಡಾ. ವಿನಯಚಂದ್ರ, ಶೈಕ್ಷಣಿಕ ವಿಭಾಗದ ರಿಜಿಸ್ಟ್ರಾರ್ ಡಾ. ನಾರ್ಬರ್ಟ್ ಮಸ್ಕರೇನ್ಹಸ್, ಪುತ್ತೂರು ಮಯಿದೇ ದೇವುಸ್ ಚರ್ಚ್ ಪಾಲನಾ ಪರಿಷತ್ತಿನ ಉಪಾಧ್ಯಕ್ಷ ರೋಶನ್ ಲಸ್ರಾದೊ ಹಾಗೂ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಭಾರತಿ ಎಸ್. ರೈ ಉಪಸ್ಥಿತರಿದ್ದರು.











