ಮಂಗಳೂರು : ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ/ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 4 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮ ಗೋಳಿಯಂಗಡಿ ಹೌಸ್ ನಿವಾಸಿ ಅಬುತಾಹಿರ್ ಯಾನೇ ಅನ್ವರ್ (25) ಬಂಧಿತ ಆರೋಪಿ.
ಗಾಂಜಾ ಸಾಗಾಟ/ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೀಲ್ ಪರಿಸರದಲ್ಲಿ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಮಾದಕ ವಸ್ತು ಗಾಂಜಾ ಸಾಗಾಟ ಮಾಡುತ್ತಿದ್ದ ಆತನನ್ನು ವಶಕ್ಕೆ ಪಡೆದಿದ್ದಾರೆ.
ಆತನಿಂದ 1 ಲಕ್ಷ ರೂ. ಮೌಲ್ಯದ 4 ಕೆಜಿ ಗಾಂಜಾ, ದ್ವಿಚಕ್ರ ವಾಹನ, ಮೊಬೈಲ್ ಫೋನ್ ಅನ್ನು ಸ್ವಾ ಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಅಂದಾಜು ಮೌಲ್ಯ 1.75 ಲಕ್ಷ ರೂ. ಆಗಬಹು ಎಂದು ಅಂದಾಜಿಸಲಾಗಿದ್ದು, ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ ಅವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕ ಶ್ಯಾಮ್ ಸುಂದರ್ ಎಚ್.ಎಂ., ಪಿಎಸ್ಐ ನರೇಂದ್ರ, ಎಎಸ್ಐ ಮೋಹನ್ ಕೆ.ವಿ., ರಾಮ ಪೂಜಾರಿ, ಸುಜನ್ ಶೆಟ್ಟಿ,ಮತ್ತು ಸಿಸಿಬಿ ಸಿಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.















