
ಚೆನ್ನೈ ಅಕ್ಟೋಬರ್ 11: ಶಾರ್ಜಾಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ (Air India) ವಿಮಾನದಲ್ಲಿ ದಿಢೀರ್ ತಾಂತ್ರಿಕ ಸಮಸ್ಯೆ ಕಂಡು ಬಂದ ಕಾರಣ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ. ಎಮರ್ಜೆನ್ಸಿ ಲ್ಯಾಂಡಿಂಗ್ ಮಾಡುವ ಮುನ್ನ ಸುಮಾರು ಎರಡು ಗಂಟೆಗಳ ಕಾಲ ತಮಿಳುನಾಡಿನ ತಿರುಚ್ಚಿ ನಗರದ ಮೇಲೆ ಈ ವಿಮಾನ ಗಿರಕಿಹೊಡೆದಿದ್ದು, ಜನರಲ್ಲಿ ಆತಂಕ ಮೂಡಿಸಿತ್ತು. ತಿರುಚಿರಾಪಳ್ಳಿಯಿಂದ(Tiruchirapalli) ಶಾರ್ಜಾಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿತ್ತು.
IX613 ವಿಮಾನ 141 ಪ್ರಯಾಣಿಕರೊಂದಿಗೆ ಸಂಜೆ 5:45 ಕ್ಕೆ ತಿರುಚ್ಚಿ ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿತ್ತು. ತಾಂತ್ರಿಕ ದೋಷ ಕಂಡು ಬಂದ ಕೂಡಲೇ ಎಮರ್ಜೆನ್ಸಿ ಘೋಷಿಸಿದ ಏರ್ ಇಂಡಿಯಾ ವಿಮಾನದ ಪೈಲಟ್ 3 ಗಂಟೆಗಳ ಕಾಲ ಆಗಸದಲ್ಲೇ ಗಿರಕಿ ಹೊಡೆದು ನಂತರ ತಿರುಚಿರಾಪಳ್ಳಿ ವಿಮಾನ ನಿಲ್ದಾಣದಲ್ಲಿ ಸೇಫ್ ಲ್ಯಾಂಡಿಂಗ್ ಮಾಡಿದ್ದಾರೆ.
ತಿರುಚ್ಚಿ ವಿಮಾನ ನಿಲ್ದಾಣದ ನಿರ್ದೇಶಕ ಗೋಪಾಲಕೃಷ್ಣನ್ ಮಾತನಾಡಿ, ತಿರುಚ್ಚಿಯಿಂದ ಶಾರ್ಜಾಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ತಾಂತ್ರಿಕ ದೋಷವನ್ನು (ಹೈಡ್ರಾಲಿಕ್ ವೈಫಲ್ಯ) ಎದುರಿಸಿದೆ. ಹಾಗಾಗಿ ತಿರುಚ್ಚಿ ವಿಮಾನ ನಿಲ್ದಾಣದಲ್ಲಿ ಇಳಿಯುವ ಮೊದಲು ಇಂಧನವನ್ನು ಕಡಿಮೆ ಮಾಡಲು ಗಿರಕಿ ಹೊಡೆದಿತ್ತು ಎಂದು ಹೇಳಿದ್ದಾರೆ. ವಿಮಾನ ಲ್ಯಾಂಡಿಂಗ್ ವೇಳೆ ಯಾವುದೇ ದೊಡ್ಡ ಅಪಘಾತ ಸಂಭವಿಸದಂತೆ ಖಚಿತಪಡಿಸಿಕೊಳ್ಳಲು 20 ಕ್ಕೂ ಹೆಚ್ಚು ಆಂಬ್ಯುಲೆನ್ಸ್ ಮತ್ತು ಅಗ್ನಿಶಾಮಕ ವಾಹನಗಳನ್ನು ವಿಮಾನ ನಿಲ್ದಾಣದಲ್ಲಿ ಇರಿಸಲಾಗಿತ್ತು.
‘ತಿರುಚಿರಾಪಳ್ಳಿಯಿಂದ ಶಾರ್ಜಾಕ್ಕೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ಫ್ಲೈಟ್ IX 613 ತಿರುಚಿರಾಪಳ್ಳಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಡಿಜಿಸಿಎ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ. ಲ್ಯಾಂಡಿಂಗ್ ಗೇರ್ ತೆರೆಯುತ್ತಿದೆ. ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ವಿಮಾನ ನಿಲ್ದಾಣವನ್ನು ಅಲರ್ಟ್ ಮೋಡ್ನಲ್ಲಿ ಇರಿಸಲಾಗಿದೆ’ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.






