ಪುತ್ತೂರು: ಪಶ್ಚಿಮ ಬಂಗಾಳದ ಆರ್‌ಜಿಕರ್ ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿದ ಪ್ರಕರಣದಲ್ಲಿ ಸಂತ್ರಸ್ಥ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ಆರೋಗ್ಯ ಕಾರ್ಯದರ್ಶಿಯನ್ನು ತಕ್ಷಣ ವಜಾಗೊಳಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಟ್ಟುಕೊAಡು ಅಲ್ಲಿನ ಕಿರಿಯ ವೈದ್ಯರು ನಡೆಸುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ನೈತಿಕ ಬೆಂಬಲ ನೀಡುವ ಜತೆಗೆ ಅವರ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿ ಪುತ್ತೂರು ಐಎಂಎ ವತಿಯಿಂದ ರಾಷ್ಟçಪತಿಗಳಿಗೆ ಪುತ್ತೂರು ಸಹಾಯಕ ಆಯುಕ್ತರಾದ ಜುಬಿನ್ ಮೊಹಾಪಾತ್ರ ಅವರ ಮೂಲಕ ಮಂಗಳವಾರ ಮನವಿ ಸಲ್ಲಿಸಲಾಯಿತು.
ಆಮರಣಾಂತ ಉಪವಾಸ ಸತ್ಯಾಗ್ರಹ ೧೦ನೇ ದಿನಕ್ಕೆ ಕಾಲಿಟ್ಟಿದ್ದು, ಈಗಾಗಲೇ ಮೂರು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಸತ್ಯಾಗ್ರಹವನ್ನು ಹಾಗೂ ಅವರ ಬೇಡಿಕೆಗಳನ್ನು ಬೆಂಬಲಿಸಿ ರಾಜ್ಯದ ವಿವಿಧ ಕಡೆಗಳ ಮೆಡಿಕಲ್ ಕಾಲೇಜಿಗಳಲ್ಲಿ ಸಾಂಕೇತಿಕ ಉಪವಾಸ ನಡೆಸಲಾಗುತ್ತಿದೆ. ಕೆಲಸ ಸ್ಥಳದಲ್ಲಿ ಭದ್ರತೆ, ಎಲ್ಲಾ ಆಸ್ಪತ್ರೆಗಳು ಹಾಗೂ ಮೆಡಿಕಲ್ ಕಾಲೇಜುಗಳಲ್ಲಿ ಸಿಸಿಟಿವಿ ಅಳವಡಿಕೆ ಪೊಲೀಸ್ ಸಿಬಂದಿಗಳ ಪಹರೆ ಸಹಿತ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಈ ಉಪವಾಸ ಸತ್ಯಾಗ್ರಹ ನಡೆಯುತ್ತಿದೆ. ಪುತ್ತೂರಿನಲ್ಲಿಯೂ ಭಾರತೀಯ ವೈದ್ಯಕೀಯ ಸಂಘ ಈ ಸತ್ಯಾಗ್ರಹಿಗಳಿಗೆ ನೈತಿಕ ಬೆಂಬಲದ ಹಿನ್ನಲೆಯಲ್ಲಿ ಮನವಿ ಸಲ್ಲಿಸಿದೆ. 
ಅಪರಾಧಿಗಳಿಗೆ ಶಿಕ್ಷೆ- ಆಗ್ರಹ
ಭಾರತೀಯ ವೈದ್ಯಕೀಯ ಸಂಘದ ಪುತ್ತೂರು (ಐಎಂಎ) ಘಟಕದ ಅಧ್ಯಕ್ಷ ಡಾ. ನರಸಿಂಹ ಶರ್ಮ ಕಾನಾವು ಅವರು ಮಾತನಾಡಿ, ಹತ್ಯೆಯಾದ ವೈದ್ಯೆಯ ಕುಟುಂಬಕ್ಕೆ ನ್ಯಾಯ ನೀಡಬೇಕು. ಅಪರಾಧಿಗಳಿಗೆ ಶಿಕ್ಷೆ ನೀಡಬೇಕು. ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಕಿರಿಯ ವೈದ್ಯರ ಎಲ್ಲಾ ಬೇಡಿಕೆಗಳನ್ನು ತಕ್ಷಣ ಈಡೇರಿಸಬೇಕು ಎಂದು ಈಗಾಗಲೇ ಪುತ್ತೂರು ಐಎಂಎ ವತಿಯಿಂದ ಪ್ರಧಾನಿ, ಮುಖ್ಯಮಂತ್ರಿ ಹಾಗೂ ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಗೆ ಮನವಿ ನೀಡಲಾಗಿದೆ ಎಂದು ತಿಳಿಸಿದರು.
ಕೇಂದ್ರ ಸರಕಾರದಿಂದ ಕಠಿಣ ಕಾನೂನು
ಭಾರತೀಯ ವೈದ್ಯಕೀಯ ಸಂಘ ಪುತ್ತೂರು ಘಟಕದ ಕಾರ್ಯದರ್ಶಿ ಡಾ. ಗಣೇಶ್‌ಪ್ರಸಾದ್ ಮುದ್ರಾಜೆ ಅವರು ಮಾತನಾಡಿ, ಪಶ್ಚಿಮಬಂಗಾಳದಲ್ಲಿ ಕಿರಿಯ ವೈದ್ಯರು ನಡೆಸುತ್ತಿರುವ ಸತ್ಯಾಗ್ರಹಕ್ಕೆ ನಮ್ಮ ಬೆಂಬಲ ಇದೆ. ಅಲ್ಲಿ ಸಂತ್ರಸ್ಥ ಕುಟುಂಬಕ್ಕೆ ನ್ಯಾಯ ಸಿಗದಿರುವುದು ನಮ್ಮೆಲ್ಲಾ ವೈದ್ಯಕೀಯ ಸೇವೆಗೆ ನ್ಯಾಯ ಸಿಕ್ಕಿಲ್ಲ ಎಂಬ ಭಾವನೆ ನಮ್ಮದು. ವೈದ್ಯರ ಮೇಲೆ ಹಲ್ಲೆ, ಅತ್ಯಾಚಾರ ಮತ್ತಿತರ ಕಾನೂನುಭಂಗ ಕ್ರಿಯೆಗಳಿಗೆ ಕೇಂದ್ರ ಸರ್ಕಾರ ಕಠಿಣ ಕಾನೂನು ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.
ಮನವಿ ಸಂದರ್ಭ ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಸಮಿತಿ ಸದಸ್ಯ ಡಾ. ಎಸ್.ಎಸ್ ಜ್ಯೋಶಿ, ಡಾ. ಬದ್ರಿನಾಥ್, ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಡಾ. ಜೆ.ಸಿ.ಅಡಿಗ, ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಶ್ರೀಪತಿ ರಾವ್, ಡಾ. ರಾಮ್ ಕಿಶೋರ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!