ಮಂಗಳೂರು, ನ.2: ಕರಾವಳಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಒಳನಾಡಿನಲ್ಲಿ ಮನಸು ಮನಸುಗಳ ನಡುವೆ ಶಾಂತಿ ಕದಡಿ ಹೋಗಿದೆ. ಇದು ಸರಿ ಹೋಗಲು ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು. ಇದಕ್ಕಾಗಿ ಸರ್ಕಾರ ಈ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ಜಾರಿಗೆ ತರುವ ಆಲೋಚನೆ ಹೊಂದಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಶನಿವಾರ ನಡೆದ, ಶಾಸಕ ಅಶೋಕ್ ರೈ ಅವರ ಸಾರಥ್ಯದ ರೈ ಎಸ್ಟೇಟ್ಸ್ ಎಜುಕೇಷನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ಏರ್ಪಡಿಸಿದ್ದ “ಅಶೋಕ ಜನ-ಮನ” ವಸ್ತ್ರ ವಿತರಣೆ ಕಾರ್ಯಕ್ರಮದಲ್ಲಿ ಅಂದಾಜು 50 ಸಾವಿರ ಜನರನ್ನುದ್ದೇಶಿಸಿ ಅವರು ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲೆ ಬರಡು ಭೂಮಿಯಂತಾಗುತ್ತಿದೆ. ಕೋಮು ಗಲಭೆ ಸೇರಿದಂತೆ ಇತರ ಸಮಸ್ಯೆಗಳಿಂದಾಗಿ ವಿದ್ಯಾಸಂಸ್ಥೆಗಳಿಗೆ ಹೊರ ಜಿಲ್ಲೆಗಳಿಂದ ವಿದ್ಯಾರ್ಥಿಗಳು ಬರುತ್ತಿಲ್ಲ. ಇಲ್ಲಿ ಹುಟ್ಟಿದ ಅನೇಕ ಬ್ಯಾಂಕ್ ಗಳು ಮಾಯವಾಗಿವೆ. ಇಲ್ಲಿನ ಯುವಕರು ಸೌದಿ ಅರೇಬಿಯಾ, ಮುಂಬೈ, ಬೆಂಗಳೂರಿಗೆ ಉದ್ಯೋಗ ಅರಸಿ ಹೋಗುತ್ತಿದ್ದಾರೆ. ಈ ಭಾಗದ ನಾಯಕರು ಸ್ಥಳೀಯವಾಗಿ ಉದ್ಯೋಗ ಸೃಷ್ಟಿಗೆ ಆದ್ಯತೆ  ನೀಡಿ ಎಂದು ಸಲಹೆ ಕೊಟ್ಟಿದ್ದಾರೆ. ಈ ಭಾಗದಲ್ಲಿ ಅತಿ ಹೆಚ್ಚು ದೇವಸ್ಥಾನಗಳಿವೆ, ಸಮುದ್ರ ತೀರವಿದೆ. ಹಾಗಾಗಿ ಈ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ಜಾರಿಗೆ ಕ್ರಮ ವಹಿಸಲಾಗುವುದು. ಅತಿ ದೊಡ್ಡ ಬಂದರು ಇದ್ದರೂ ಸಹ ಮಂಗಳೂರಿನಲ್ಲಿ ಉತ್ತಮವಾದ ಫೈವ್ ಸ್ಟಾರ್ ಹೋಟೆಲ್ ಗಳಿಲ್ಲ.ಪುತ್ತೂರಿನ ಅಭಿವೃದ್ಧಿಗೆ ಅಶೋಕ್ ರೈಯವರು ಅನೇಕ ಯೋಜನೆಗಳನ್ನು ಮುಂದಿಟ್ಟು ಮನವಿ ಮಾಡಿದ್ದಾರೆ. ಉಪ ಚುನಾವಣೆ ಇರುವ ಕಾರಣ ಈಗ ಅದನ್ನು ಬಹಿರಂಗಪಡಿಸಲು ಆಗುವುದಿಲ್ಲ. ಅವರ ಮನವಿಗಳನ್ನು ಹಂತ ಹಂತವಾಗಿ ಪೂರೈಸಲಾಗುವುದು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಮಗೆ ಎರಡು ಸ್ಥಾನಗಳಷ್ಟೇ ಸಿಕ್ಕಿರಬಹುದು. ಆದರೆ ನಾವು ಎಲ್ಲಾ ಕ್ಷೇತ್ರಗಳನ್ನು ಅಭಿವೃದ್ಧಿ ಮಾಡುತ್ತೇವೆ.

ಕ್ಷೇತ್ರದ ಅಭಿವೃದ್ಧಿಗೆ ಮುಖ್ಯಮಂತ್ರಿ ಬಳಿ ಜಗಳ

ಪುತ್ತೂರು ಕ್ಷೇತ್ರದ ಅಭಿವೃದ್ಧಿಗಾಗಿ, ಅಶೋಕ್ ಅವರು ನನ್ನ ಬಳಿ ಬಂದು ಆಗಾಗ್ಗೆ ಜಗಳ ಮಾಡುತ್ತಿರುತ್ತಾರೆ. ಅದಕ್ಕೆ ನಾನು, ಸ್ವಲ್ಪ ನಿಧಾನವಾಗಿ ಹಾಗೂ ತಾಳ್ಮೆಯಿಂದ ಕೆಲಸ ಮಾಡು ಎಂದು ಸಲಹೆ ನೀಡುತ್ತೇನೆ. ಐದು ವರ್ಷಗಳ ಕೆಲಸವನ್ನು ಒಂದೇ ವರ್ಷ ಮಾಡಬೇಡ. ಗುರಿ ಇಟ್ಟುಕೊಂಡು ವರ್ಷಕ್ಕೆ ಇಂತಿಷ್ಟು ಕೆಲಸ ಮಾಡಬೇಕು. ಆಗ ಸಮಗ್ರ ಅಭಿವೃದ್ಧಿ ಸಾಧ್ಯ. ಇದೇ ಕಾರಣಕ್ಕಾಗಿ ಕಳೆದ ಎಂಟು ವಿಧಾನಸಭೆ ಚುನಾವಣೆಯನ್ನು ಗೆದ್ದಿದ್ದೇನೆ. ನಮಗೆ ಜೀವನದಲ್ಲಿ ಯಶಸ್ಸು ಸಿಗಬೇಕಾದರೆ. ಧರ್ಮರಾಯನ ಧರ್ಮತ್ವ, ಕರ್ಣನ ದಾನತ್ವ, ಅರ್ಜುನ ಗುರಿ ಇರಬೇಕು, ವಿಧುರನ ನೀತಿ ಇರಬೇಕು, ಭೀಮನ ಬಲ ಇರಬೇಕು, ಕೃಷ್ಣನ ತಂತ್ರಗಾರಿಕೆ ಇರಬೇಕು. ಆಗ ಮಾತ್ರ ಯಶಸ್ಸು ಸಾಧ್ಯ. ಈ ಎಲ್ಲಾ ಗುಣಗಳು ಅಶೋಕ್ ರೈ ಅವರ ಬಳಿ ಇದೆ ಎಂದು ಭಾವಿಸಿದ್ದೇನೆ ಎಂದು ಡಿಕೆಶಿ ಹೇಳಿದರು.

Leave a Reply

Your email address will not be published. Required fields are marked *

Join WhatsApp Group
error: Content is protected !!