ಮಂಗಳೂರು, ನ.5: ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದಲ್ಲಿ ಈ ಬಾರಿ 8ನೇ ವರ್ಷದ ಮಂಗಳೂರು ಕಂಬಳ ಡಿಸೆಂಬರ್ 28ರಂದು ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡುಕರೆಯಲ್ಲಿ ನಡೆಯಲಿದ್ದು, ಕಂಬಳದ ಪೂರ್ವಭಾವಿ ಸಭೆ ಮಂಗಳೂರಿನ ಪತ್ತುಮುಡಿ ಸೌಧದಲ್ಲಿ ನಡೆಯಿತು.

ಸಭೆಯನ್ನು ಮಂಗಳೂರು ಕಂಬಳ ಸಮಿತಿ ಅಧ್ಯಕ್ಷರು, ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಕಳೆದ 7 ವರ್ಷಗಳಿಂದ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿರುವ ಮಂಗಳೂರು ಕಂಬಳಕ್ಕೆ ಉತ್ತಮ ಜನಮನ್ನಣೆ ಸಿಗುತ್ತಿದ್ದು ಇದು ಕರಾವಳಿಯ ಪ್ರವಾಸೋದ್ಯಮಕ್ಕೆ ಮೈಲುಗಲ್ಲಾಗಲಿದೆ. ಕಂಬಳವನ್ನು ಮುಂದಿನ ತಲೆಮಾರುಗಳಿಗೆ ಉಳಿಸುವ ಉದ್ದೇಶದಿಂದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯೋನ್ಮುಖರಾಗುವಂತೆ ಹಾಗೂ ಕಂಬಳಕ್ಕೆ ಮೆರುಗನ್ನು ನೀಡುವ ದೃಷ್ಟಿಯಿಂದ ಕರಾವಳಿಯ ಸಂಸ್ಕೃತಿಯನ್ನು ಸಾರುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಉಪಸ್ಥಿತರಿದ್ದ ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ, ಕಂಬಳ ಈ ಮಣ್ಣಿನ ಅಸ್ಮಿತೆ, ಅದನ್ನು ಮುಂದುವರಿಸಿಕೊಂಡು ಹೋಗಬೇಕಾದದ್ದು ನಮ್ಮೆಲ್ಲರ ಕರ್ತವ್ಯ. ಈ ನಿಟ್ಟಿನಲ್ಲಿ ಮಂಗಳೂರು ಕಂಬಳ ಮೇಲ್ಪಂಕ್ತಿಯಾಗಿದೆ ಎಂದರು. ಜಿಲ್ಲಾ ಕಂಬಳ ಸಮಿತಿಯ ವಿಜಯಕುಮಾರ್ ಕಂಗಿನಮನೆ ಮಾತನಾಡಿ ಮಂಗಳೂರು ನಗರದಲ್ಲಿ ನಡೆಯುವ ಕಂಬಳ ಜನ ಆಕರ್ಷಣೆಯ ಕೇಂದ್ರವಾಗುತ್ತಿದ್ದು, ಕಂಬಳಕ್ಕೆ ಇನ್ನಷ್ಟು ಮೆರುಗು ನೀಡುವ ನಿಟ್ಟಿನಲ್ಲಿ ಜಿಲ್ಲಾ ಕಂಬಳ ಸಮಿತಿ ವತಿಯಿಂದ ಸರ್ವ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಕಂಬಳ ಸಮಿತಿಯ ಪಿ.ಆರ್ ಶೆಟ್ಟಿ, ಸುಧಾಕರ ಶೆಟ್ಟಿ ಮುಗರೋಡಿ, ಮಂಗಳೂರು ಕಂಬಳ ಸಮಿತಿ ಉಪಾಧ್ಯಕ್ಷ ಕಿರಣ್ ಕುಮಾರ್, ಅನಿಲ್ ಕುಮಾರ್, ಮಂಗಳೂರು ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಜಿತ್ ಪ್ರತಾಪ್ ಮಂಗಲ್ಪಾಡಿ, ಕಂಬಳ ಸಮಿತಿ ಕೋಶಾಧಿಕಾರಿ ಪ್ರೀತಮ್ ರೈ ಉಪಸ್ಥಿತರಿದ್ದರು. ಸಂಚಾಲಕ ಸಚಿನ್ ಶೆಟ್ಟಿ ಸಾಂತ್ಯ ಸ್ವಾಗತಿಸಿ, ಉಪಾಧ್ಯಕ್ಷ ಪ್ರಕಾಶ್ ಪೂಜಾರಿ ಗರೋಡಿ ವಂದಿಸಿದರು. ಕಾರ್ಯದರ್ಶಿ ಮನ್ಮಥ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

Join WhatsApp Group
error: Content is protected !!