ಪುತ್ತೂರು: ಸರಕಾರಿ ಆಸ್ಪತ್ರೆಯ ವೈದ್ಯರೊಬ್ಬರ ಮರಣೋತ್ತರ ಪರೀಕ್ಷೆ ಮಾಡಲು ತೆರಳುತ್ತಿದ್ದ ವೇಳೆ ಕರ್ತವ್ಯಕ್ಕೆ ಅಡ್ಡಿ ಪಡಿಸಿದಲ್ಲದೆ, ವೈದ್ಯರು ಕರ್ತವ್ಯಕ್ಕೆ ತಡವಾಗಿ ಹೋಗುತ್ತಿದ್ದಾರೆಂದು ಸುಳ್ಳು ಆಪಾದನೆ ಬಿಂಬಿಸುವ ವಿಡಿಯೋ ವೈರಲ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ನೊಂದ ವೈದ್ಯೆಯ ಪರವಾಗಿ ಸರಕಾರಿ ಆಸ್ಪತ್ರೆಯಿಂದ ಪುತ್ತೂರು ನಗರ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ.

ಪುಂಜಾಲಕಟ್ಟೆಯಿಂದ 29 ವರ್ಷದ ವ್ಯಕ್ತಿಯನ್ನು ಡಿ.10 ರಂದು ಬೆಳಿಗ್ಗೆ ಆಸ್ಪತ್ರೆಗೆ ಕರೆ ತರುವಾಗ ಮೃತಪಟ್ಟಿದ್ದರು. ಮರಣೋತ್ತರ ಪರೀಕ್ಷೆಯ ಮೊದಲು ಪೊಲೀಸ್‌ ಠಾಣೆಗೆ ಎಂದಿನಂತೆ ಇಂಟಿಮೇಷನ್ ಅನ್ನು ಸರಕಾರಿ ಆಸ್ಪತ್ರೆಯಿಂದ ಕಳುಹಿಸಲಾಗಿತ್ತು. ಮೃತರ ಮರಣೋತ್ತರ ಪರೀಕ್ಷೆಗೆ ಪುಂಜಾಲಕಟ್ಟೆಯಿಂದ ಪೊಲೀಸರು ಬರಬೇಕಾಗಿದ್ದು ಅವರು ಮಧ್ಯಾಹ್ನದ ಬಳಿಕ ಆಸ್ಪತ್ರೆಗೆ ಬಂದಿದ್ದರು. ಬಳಿಕ ಅವರು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಮನವಿ ನೀಡುವ ಕಾರ್ಯಮಾಡಿದರು.

ಸಂಜೆ ವೇಳೆ ಕರ್ತವ್ಯದಲ್ಲಿದ್ದ ಡಾ.ಶ್ವೇತಾ ಅವರು ಮರಣೋತ್ತರ ಪರೀಕ್ಷೆಗೆ ಹೋಗುವ ಸಂದರ್ಭ ಮೃತರ ಕಡೆಯ ಕೆಲ ಮಂದಿ ವೈದ್ಯರು ಮರಣೋತ್ತರ ಪರೀಕ್ಷೆಗೆ ತಡವಾಗಿ ಬಂದಿರುವುದಾಗಿ ಆರೋಪಿಸಿ ತರಾಟೆಗೆತ್ತಿಕೊಂಡು ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ರವಾನೆ ಮಾಡಿದ್ದರು. ಈ ವೇಳೆ ವೈದ್ಯರು ಶಸ್ತ್ರಚಿಕಿತ್ಸಾ ಸಂದರ್ಭ ಬಿಟ್ಟು ಬರಲಾಗುವುದಿಲ್ಲ ಎಂದು ಹೇಳಿದರೂ ಅಲ್ಲಿ ನೆರೆದವರು ವೈದ್ಯರ ಮಾತನ್ನು ಕೇಳದೆ ವೈದ್ಯರನ್ನು ತರಾಟೆಗೆತ್ತಿಕೊಂಡಿದ್ದರು.

ಈ ಕುರಿತು ನೊಂದ ವೈದ್ಯೆ ಡಾ.ಶ್ವೇತಾ, ಪುತ್ತೂರು ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಆಶಾ ಪುತ್ತೂರಾಯ, ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ಅವರು ಸರಕಾರಿ ಕರ್ತವ್ಯದ ವೇಳೆ ಅಡ್ಡಿ ಮತ್ತು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಆಪಾದನೆಯ ವಿಡಿಯೋ ಹಾಕಿರುವ ಕುರಿತು ದೂರು ನೀಡಿದ್ದಾರೆ.

ಪುಂಜಾಲಕಟ್ಟೆಯಿಂದ ವ್ಯಕ್ತಿಯನ್ನು ಆಸ್ಪತ್ರೆಗೆ ತಂದಾಗ ಆತ ಮೃತ ಪಟ್ಟಿದ್ದು ಮರಣೋತ್ತರ ಪರೀಕ್ಷೆಗೆ ಪುಂಜಾಲಕಟ್ಟೆಯಿಂದ ಪೊಲೀಸರು ಬರಬೇಕಾಗುತ್ತದೆ. ಕರ್ತವ್ಯದಲ್ಲಿದ್ದ ಅರೆವಳಿಕಾ ತಜ್ಞೆ ಡಾ. ಶ್ವೇತಾ ಆಗ ಮಗುವಿನ ಶಸ್ತ್ರಚಿಕಿತ್ಸೆಯಲ್ಲಿದ್ದು ಪೂರ್ಣ ಆಗುವ ತನಕ ಜೊತೆಯಲ್ಲೇ ಇರಬೇಕಾದ ಕಾರಣ ಶಸ್ತ್ರ ಚಿಕಿತ್ಸೆಯನ್ನು ಮುಗಿಸಿ ಸಂಜೆ ಮರಣೋತ್ತರ ಪರೀಕ್ಷೆಗೆ ಬಂದಿದ್ದಾರೆ. ಈ ವೇಳೆ ಮೃತರ ಕಡೆಯವರಿಗೂ ವಿಷಯ ತಿಳಿಸಿದರೂ ಮಾತು ಕೇಳದೆ ಸುಳ್ಳು ಆಪಾದನೆಯ ವಿಡಿಯೋ ಮಾಡಿ ಕರ್ತವ್ಯಕ್ಕೆ ಅಡ್ಡಿ ಮಾಡಿದ್ದಾರೆ. ಡಾ. ಆಶಾ ಪುತ್ತೂರಾಯ. ಆಡಳಿತ ವೈದ್ಯಾಧಿಕಾರಿ ಸರಕಾರಿ ಸಾರ್ವಜನಿಕ ಆಸ್ಪತ್ರೆ ಪುತ್ತೂರು.

Leave a Reply

Your email address will not be published. Required fields are marked *

Join WhatsApp Group
error: Content is protected !!